ಬೆಂಗಳೂರು: ನಗರ ಸಂಚಾರ ವಿಭಾಗ ಪೊಲೀಸರು ಸ್ವಯಂ ಪ್ರೇರಿತರಾಗಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡುತ್ತಿದ್ದಾರೆ.
ನಗರದ ಗುಂಡಿಗಳ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಬಿಬಿಎಂಪಿಗೆ ಚಾಟಿ ಬೀಸಿತ್ತು. ಹೈಕೋರ್ಟ್ ಬಿಸಿ ಮುಟ್ಟಿಸಿದರೂ ಬಿಬಿಎಂಪಿ ಮಾತ್ರ ತನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲದಂತೆ ನಡೆದುಕೊಂಡಿತ್ತು.
ಸಂಚಾರಿ ಪೊಲೀಸರು ಈಗ ವಾಹನ ಸವಾರರ ಪರದಾಟ ನೋಡಿ ಸ್ವಯಂ ಪ್ರೇರಿತವಾಗಿ ಗುಂಡಿಗಳನ್ನು ಮುಚ್ಚುತ್ತಿದ್ದಾರೆ. ಬೆಂಗಳೂರು ನಗರದ 44 ಪೋಲೀಸ್ ಠಾಣಾ ವತಿಯಿಂದ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ.
ನಗರದಾದ್ಯಂತ 221 ದೊಡ್ಡ ದೊಡ್ಡ ಗುಂಡಿಗಳು ಸೇರಿದಂತೆ 300ಕ್ಕೂ ಹೆಚ್ಚು ಗುಂಡಿಗಳಿಗೆ ಸಿಮೆಂಟ್ ಕಾಂಕ್ರೀಟ್ ಹಾಕಲಾಗಿದೆ. ಸಂಚಾರ ಪೋಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.