– ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ವಾಟರ್ ಟ್ಯಾಂಕ್ ಕುಸಿತ ಸಂಭವಿಸಿ ಮೂರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ರಕ್ಷಣೆ ಮಾಡಿರುವ ಘಟನೆ ನಗರದ ಲುಂಬಿನಿ ಗಾರ್ಡನ್ ಬಳಿಯ ಜೋಗಪ್ಪ ಲೇಔಟ್ನಲ್ಲಿ ಘಟನೆ.
ನೀರು ಶುದ್ಧೀಕರಣ ಘಟಕ ನಿರ್ಮಿಸಲು ಸುಮಾರು 8 ವಾಟರ್ ಟ್ಯಾಂಕ್ ಗಳನ್ನು ನಿರ್ಮಾಣ ಮಾಡುವ ಕಾರ್ಯ ನಡೆಯುತ್ತಿತ್ತು. ಇಂದು ಸುಮಾರು 30ಕ್ಕೂ ಹೆಚ್ಚು ಕಾರ್ಮಿಕರು ಕಟ್ಟಡದ ಸೆಂಟ್ರಿಂಗ್ ಕಾರ್ಯದಲ್ಲಿ ತೊಡಗಿದ್ದರು. ಆದರೆ ಈ ವೇಳೆ ಏಕಾಏಕಿ ಕಟ್ಟದ ಸೆಂಟ್ರಿಂಗ್ ಕುಸಿತ ಆಗಿದೆ. ಪರಿಣಾಮ ಸುಮಾರು 80 ಅಡಿ ಅಳಕ್ಕೆ ಉರುಳಿ ಬಿದ್ದಿದ್ದಾರೆ.
ಘಟನೆ ನಡೆಯುತ್ತಿದಂತೆ ಮಾಹಿತಿ ಪಡೆದ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳೀಯ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯವನ್ನು ನಡೆಸಿದ್ದಾರೆ. ಘಟನೆಯಲ್ಲಿ 20 ಜನರನ್ನು ರಕ್ಷಣೆ ಮಾಡಿದ್ದು, ಇನ್ನು ಹಲವು ಮಂದಿ ಸೆಂಟ್ರಿಂಗ್ ಕೆಳಗೆ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯ ಮುಂದುವರಿದಿದ್ದು, ಈಗಾಗಲೇ ರಕ್ಷಣೆ ಮಾಡಿರುವ ಮಂದಿಯಲ್ಲಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭಿಸಿದೆ.
ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಬಹುತೇಕ ಮಂದಿ ಉತ್ತರ ಕರ್ನಾಟಕ ಮೂಲದವರು ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಕೆಲ ಉತ್ತರ ಭಾರತದ ಕಾರ್ಮಿಕರು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಘಟನೆಯಲ್ಲಿ ಜೀವ ಉಳಿಸಿಕೊಂಡ ಕೆಲ ಕಾರ್ಮಿಕರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಕೊಲಂಬಿಯ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಿರ್ಮಾಣ ಹಂತದಲ್ಲಿದ್ದ ವಾಟರ್ ಟ್ಯಾಂಕ್ ಬಿಡಬ್ಲೂಎಸ್ಎಸ್ಬಿ ಕಚೇರಿಗೆ ಸೇರಿದೆ ಎಂಬ ಮಾಹಿತಿ ಲಭಿಸಿದೆ. ನೀರು ಶುದ್ಧೀಕರಣ ಘಟಕ ನಿರ್ಮಾಣ ಮಾಡಲು ಬೃಹತ್ 8 ವಾಟರ್ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತಿತ್ತು. ಸುಮಾರು 30 ಎಕರೆ ಪ್ರದೇಶದಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದೆ.