ತುಮಕೂರು: ಕಳೆದ 6 ತಿಂಗಳಿನಿಂದ ಸಂಬಳ ಆಗದ ಹಿನ್ನೆಲೆಯಲ್ಲಿ ಮನನೊಂದ ಬೆಸ್ಕಾಂ ಗ್ರಾಮ ವಿದ್ಯುತ್ ಪ್ರತಿನಿಧಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ನಡೆದಿದೆ. ಮಣಕಿಕೆರೆ ಗ್ರಾಮ ಪಂಚಾಯ್ತಿಯಲ್ಲಿ ಗ್ರಾಮ ವಿದ್ಯುತ್ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿರೋ ಎಸ್ ಕುಮಾರ್ ಎಂಬವರೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಬೆಸ್ಕಾಂ ಎಇಇ ಚಂದ್ರುನಾಯಕ ಕಾರಣ ಇಲ್ಲದೆ ಕಳೆದ 6 ತಿಂಗಳಿನಿಂದ ಸಂಬಳ ತಡೆ ಹಿಡಿದಿದ್ದರು ಅನ್ನೋ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಕುಮಾರ್ ಸಂಸಾರ ನಿರ್ವಹಣೆ ಕಷ್ಟವಾಗಿತ್ತು. ಹೀಗಾಗಿ ಗುರುವಾರ ರಾತ್ರಿ ಹಾಲ್ಕುರಿಕೆ ಗ್ರಾಮದ ತನ್ನ ತೋಟದಲ್ಲಿ ಡೆತ್ ನೋಟ್ ಬರೆದಿಟ್ಟು ವಿಷ ಕುಡಿದಿದ್ದಾರೆ.
ಕುಮಾರ್ ವಿಷ ಕುಡಿದಿರೋದನ್ನು ಗಮನಿಸಿದ ಅಕ್ಕಪಕ್ಕದವರು ತಕ್ಷಣೆ ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.