ಚಾಮರಾಜನಗರ: ಧನುರ್ಮಾಸ ಪ್ರಾರಂಭದ ಹಿನ್ನಲೆ ತಾಲೂಕಿನ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ಸೋಮವಾರ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.
ವಿಶೇಷ ಪೂಜೆ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇಗುಲವನ್ನು ವಿವಿಧ ಪುಷ್ಪ ಹಾಗೂ ತಳಿರು ತೋರಣದಿಂದ ಸಿಂಗಾರ ಮಾಡಲಾಗಿತ್ತು. ಬೆಳಗಿನ ಜಾವ 5 ಗಂಟೆಗೆ ದೇವಿಗೆ ಪನ್ನೀರು, ಎಳನೀರು, ಕುಂಕುಮ, ಜೇನುತುಪ್ಪ, ಹಾಲು, ಗಂಧದ ಅಭಿಷೇಕವನ್ನು ನೆರವೇರಿಸಿ ಮಹಾ ಮಂಗಳಾರತಿ ಮಾಡಲಾಯಿತು.
ಪಟ್ಟಣ ಸೇರಿದಂತೆ ಭೈರನತ್ತ, ಉದ್ದನೂರು, ಮಾಲಾಪುರ, ಅಜ್ಜೀಪುರ, ಚಿಂಚಳ್ಳಿ, ಮಣಗಳ್ಳಿ, ಮಂಗಲ ವಿವಿಧ ಭಾಗದಿಂದ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಹರಕೆ ಹೊತ್ತ ಭಕ್ತರು ಉಪ್ಪು ಸುರಿದು ದೇವಿ ಕೃಪೆಗೆ ಪಾತ್ರರಾದರು. ದೇಗುಲದ ವತಿಯಿಂದ ಪ್ರಸಾದ ನೀಡಲಾಯಿತು. ಅರ್ಚಕ ಅರಣ್ರಾವ್ ಸಿಂಧೆ ಪೂಜಾ ಕೈಂಕರ್ಯ ನೆರವೇರಿಸಿದರು.