ತುಮಕೂರು/ಧಾರವಾಡ: ಮಂಗಳವಾರ ಮತ್ತು ಬುಧವಾರ ಎರಡು ದಿನ ಭಾರತ ಮುಷ್ಕರ ಇರುವುದರಿಂದ ಎರಡು ದಿನಗಳಲ್ಲಿ ನಡೆಯಬೇಕಿದ್ದ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಕಾರ್ಮಿಕ ಸಂಘಟನೆಗಳ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಾನೂನು, ದೈಹಿಕ ಶಿಕ್ಷಣ ಸೇರಿದಂತೆ ನಾಳೆ ಅಂದರೆ ಮಂಗಳವಾರ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಕುಲಸಚಿವ ಡಾ. ಶಿವರಾಜ್ ಅವರು ಹೇಳಿದ್ದಾರೆ. ಇದನ್ನೂ ಓದಿ: ಎರಡು ದಿನ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ಇತ್ತ ತುಮಕೂರು ವಿಶ್ವವಿದ್ಯಾಲಯದಲ್ಲೂ ನಾಳೆ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿವಿ ಆದೇಶ ನೀಡಿದೆ. ಧಾರವಾಡದ ಕರ್ನಾಟಕ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.
ಜನವರಿ 8 ಮತ್ತು 9 ರಂದು ಎಂಎ, ಎಂಎಸ್ಸಿ, ಎಂಕಾಂ ಪದವಿಯ ಮೊದಲ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ಭಾರತ ಮುಷ್ಕರವಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಜನವರಿ 17 ಮತ್ತು 18ಕ್ಕೆ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಬೆಳಗಾವಿ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳು ಮುಂದೂಡಿಲಾಗಿದ್ದು, ಎಂಎ, ಎಂಕಾಂ ಮತ್ತು ಎಂಎಸ್ಸ್ಸಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ನಾಳೆ ಭಾರತ ಬಂದ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಪದವಿಗಳು ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ಆರ್ ಸಿಯು ರಿಜಿಸ್ಟ್ರಾರ್ ಲಿಖಿತ ರೂಪದಲ್ಲಿ ತಿಳಿಸಿದ್ದಾರೆ.
ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ಮುಷ್ಕರ ನಡೆಸಲು ಹಲವು ಕಾರ್ಮಿಕ ಸಂಘಟನೆಗಳು ನಿರ್ಧರಿಸಿದ್ದಾರೆ. ರಾಜ್ಯದಲ್ಲೂ ಎಲ್ಲಾ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಇದರಿಂದ ಗಲಾಟೆ, ಗಲಭೆಗಳು ನಡೆಯುವ ಸಾಧ್ಯತೆಯಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗಬಾರದೆಂದು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv