ರಾಯಚೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ದೇಶಾದ್ಯಂತ ಮುಷ್ಕರಕ್ಕೆ ರಾಯಚೂರಿನಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಸಿಂಧನೂರು, ದೇವದುರ್ಗದ ಜಾಲಹಳ್ಳಿಯಲ್ಲಿ ಅಂಗಡಿ ಬಂದ್ ಮಾಡಿ ಹೋರಾಟಕ್ಕೆ ಜನ ಬೆಂಬಲ ಸೂಚಿಸಿದ್ದಾರೆ.
ರಾಯಚೂರಿನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ನಗರದ ರೈಲ್ವೆ ನಿಲ್ದಾಣ ವೃತ್ತದಲ್ಲಿ ರಸ್ತಾ ರೋಕೋ ನಡೆಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿತು. ವಿವಿಧ ಬ್ಯಾಂಕ್ ಗಳ ಸಿಬ್ಬಂದಿ ಬ್ಯಾಂಕ್ ಗಳ ಮುಂದೆ ಪ್ರತಿಭಟನೆ ನಡೆಸಿದರು. ಬಳಿಕ ಅಂಬೇಡ್ಕರ್ ವೃತ್ತದಲ್ಲಿ 10 ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಸಮಾವೇಶ ನಡೆಸಿದವು.
ಉಳಿದಂತೆ ಜಿಲ್ಲೆಯಲ್ಲಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೇ ವ್ಯಕ್ತವಾಗಿದ್ದು ಜನಜೀವನ ಎಂದಿನಂತೆ ಸಾಗಿದೆ. ಬಸ್ ಸಂಚಾರ, ಶಾಲಾ ಕಾಲೇಜು, ವ್ಯಾಪಾರ ವಹಿವಾಟು, ಆಸ್ಪತ್ರೆ, ಪೆಟ್ರೋಲ್ ಬಂಕ್ ಸೇರಿದಂತೆ ಪ್ರತಿಯೊಂದು ಕೂಡ ಎಂದಿನಂತೆ ನಡೆಯುತ್ತಿವೆ.
ಮುಷ್ಕರದ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನೆರೆದಿರುವ ಕಾರ್ಮಿಕ ಸಂಘಟನೆಗಳ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ. ಮುಷ್ಕರ ಹಿನ್ನೆಲೆ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.