ಕಾರವಾರ: ಭಟ್ಕಳದಲ್ಲಿ ಮೂರಿನಕಟ್ಟೆ ಧ್ವಂಸದ ಹಿನ್ನೆಲೆ ಹಿಂದೂ-ಮುಸ್ಲಿಂ ಗಲಾಟೆ ಬೂದಿ ಮುಚ್ಚಿದ ಕೆಂಡದಂತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭಟ್ಕಳ ಶಹರ ಹಾಗೂ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳನ್ನ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.
ಇಲ್ಲಿನ ಹಿಂದೂ-ಮುಸ್ಲಿಂ ಗಲಾಟೆ ತಣ್ಣಗಾಗದ ಕಾರಣ ಇಂದಿನಿಂದ 3 ದಿನಗಳ ಕಾಲ ಅಂದರೆ ಮೇ 25 ರಿಂದ ಮೇ 27ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಏನಿದು ಘಟನೆ?
ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿಯ ರಸ್ತೆ ಅಗಲೀಕರಣದ ವೇಳೆ ಇಲ್ಲಿನ ಮೂರಿನಕಟ್ಟೆಯನ್ನು ತೆರವುಗೊಳಿಸಲಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಂಡ ಬಳಿಕ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಯ ಅದೇ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಕಟ್ಟೆಯನ್ನು ಮರು ನಿರ್ಮಾಣ ಮಾಡಿದ್ದರು. ಇದಕ್ಕೆ ಮುಸ್ಲಿಂ ಸಂಘಟನೆಗಳು ಹಾಗೂ ಮುಸ್ಲಿಂ ಸಮುದಾಯದ ಪ್ರಮುಖರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಕಟ್ಟೆಯನ್ನು ಪುನಃ ತೆರವುಗೊಳಿಸುವಂತೆ ಒತ್ತಾಯಿಸಿದ್ದರು.
ಅದಾದ ಬಳಿಕ ಭಾನುವಾರ ಮುಸ್ಲಿಂ ಸಮುದಾಯದ ನೂರಾರು ಜನ ಇದ್ದಕ್ಕಿದ್ದಂತೆ ಮೂರಿನಕಟ್ಟೆಯನ್ನು ಒಡೆದುರುಳಿಸಲು ಯತ್ನಿಸಿದ್ದರು. ಈ ವೇಳೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮುಸ್ಲಿಂ ಯುವಕರನ್ನು ತಡೆಯಲು ಯತ್ನಿಸಿದ್ದರು. ಈ ವೇಳೆ ಮುಸ್ಲಿಮರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು.
