ಬೀದರ್: ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ಗ್ರಾಮಸ್ಥರೇ ಕಲ್ಲುಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಸಿರಗೂರ ಗ್ರಾಮದಲ್ಲಿ ನಡೆದಿದೆ.
ಬಟಗೇರಾವಾಡಿ ಗ್ರಾಮದ ಬಸವರಾಜ ಹಣಮಂತ ಚಂಡಕಾಳೆ (38) ಕೊಲೆಯಾದ ರೌಡಿ ಶೀಟರ್. ಕೊಲೆಯಾದ ರೌಡಿ ಶೀಟರ್ ಬಸವರಾಜ ಬಿಎಸ್ಎಫ್ನಲ್ಲಿ ಸುಮಾರು 10 ವರ್ಷಗಳಿಗೂ ಅಧಿಕ ಕಾಲ ಸೇವೆಸಲ್ಲಿಸಿದ್ದ. ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
- Advertisement 2
- Advertisement 3
ಸಿರಗೂರ ಗ್ರಾಮದಲ್ಲಿ ಭಾನುವಾರ ರಾತ್ರಿ ಅದ್ಧೂರಿಯಾಗಿ ದೇವಿ ಮೆರವಣಿಗೆ ನಡೆದಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮಧ್ಯೆ ಜಗಳವಾಗಿತ್ತು. ಆದರೆ ಗ್ರಾಮದ ಹಿರಿಯರು ಸೇರಿ ಅದನ್ನು ಬಗೆ ಹರಿಸಿದ್ದರು. ಆದರೆ ಸೋಮವಾರ ಸಂಜೆ ಮತ್ತೆ ಎರಡೂ ಗುಂಪುಗಳ ಮಧ್ಯೆ ಗಲಾಟೆ ಆರಂಭವಾಗಿತ್ತು. ರೌಡಿ ಶೀಟರ್ ಬಸವರಾಜ್ ಒಂದು ಗುಂಪಿನ ಪರ ವಹಿಸಿಕೊಂಡು ತನ್ನ ಸಹಚರರೊಂದಿಗೆ ಸಿರಗೂರ ಗ್ರಾಮಕ್ಕೆ ಆಗಮಿಸಿದ್ದ.
- Advertisement 4
ಬಸವರಾಜ್ ಎದುರಾಳಿ ಗುಂಪಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಇದರಿಂದ ಕೋಪಗೊಂಡ ಸಿರಗೂರ ಗ್ರಾಮಸ್ಥರು ಬಸವರಾಜ್ಗೆ ಕಲ್ಲುಗಳಿಂದ ಹೊಡೆದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ರೌಡಿ ಶೀಟರ್ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಂಠಾಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಗಾಯವಾಗಿದ್ದು, ಅವರನ್ನು ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.