ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ ನೋಟ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೆಸರಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಸಚಿನ್ ಡೆತ್ನೋಟ್ನಲ್ಲಿ ಪ್ರಿಯಾಂಕ್ ಖರ್ಗೆಯವರ ಹೆಸರೂ ಇದೆ. ಅವರಿಗೆ ಗೌರವ, ಮಾನ, ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ. ಈಶ್ವರಪ್ಪ ವಿಚಾರದಲ್ಲಿ ಅವರು ಏನು ಮಾತಾಡಿದ್ರು? ಈಗ ಅದನ್ನು ನೆನಪಿಸಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳಾಗುತ್ತಿವೆ. ವಾಲ್ಮೀಕಿ ನಿಗಮದ ಚಂದ್ರಶೇಖರ್, ದಾವಣೆಗೆರೆಯಲ್ಲಿ ಒಬ್ಬರು ಪಿಸಿ ಹತ್ಯೆ, ರುದ್ರಣ್ಣ, ಸಚಿನ್ ಅವರ ಆತ್ಮಹತ್ಯೆಯಾಗಿದೆ. ವಿಪಕ್ಷವಾಗಿ ನಾವು ಸಾಕಷ್ಟು ಹೋರಾಟ ಮಾಡಿದ್ದೇವೆ. ಎಲ್ಲಾ ರೀತಿಯ ಹೋರಾಟ ಮಾಡಿ ಕೇಸ್ ಹಾಕಿಸಿಕೊಂಡಿದ್ದೇವೆ ಎಂದಿದ್ದಾರೆ.
ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.4ರಂದು ನಾನು ಹಾಗೂ ವಿಜಯೇಂದ್ರ ಸೇರಿದಂತೆ ನಮ್ಮ ಪಕ್ಷದ ಎಲ್ಲಾ ಮುಖಂಡರು ಕಲಬುರಗಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ