– ಜೀವಾವಧಿ ಶಿಕ್ಷೆಗೆ ತಡೆ ನೀಡಿದ ಹೈಕೋರ್ಟ್
ಬೆಂಗಳೂರು/ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಯೋಗೇಶ್ ಗೌಡ (Yogesh Gowda) ಕೊಲೆ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಬಿಗ್ ರಿಲೀಫ್ ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿರುವ ಹೈಕೋರ್ಟ್ (High Court) ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನೂ ಅಮಾನತ್ತಿನಲ್ಲಿಟ್ಟಿದೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ, ವಿನಯ್ ಕುಲಕರ್ಣಿ ಸೇರಿ 10 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಇಬ್ಬರ ಶ್ಯೂರಿಟಿ, 5 ಲಕ್ಷ ರೂ. ಬಾಂಡ್ಗೆ ಕೋರ್ಟ್ಗೆ ಸೂಚಿಸಿದೆ. ಈ ಮೂಲಕ ಶಾಸಕ ಸ್ಥಾನ ಊರ್ಜಿತವಾಗಿದೆ. ಇದನ್ನೂ ಓದಿ: ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
ಇದೇ ವೇಳೆ ಕೋರ್ಟ್, ಪಾಸ್ಪೋರ್ಟ್ನ್ನು ಸೆಷನ್ಸ್ ಕೋರ್ಟ್ಗೆ ನೀಡುವಂತೆ ತಿಳಿಸಿ, ದೇಶ ತೊರೆಯದಂತೆ ಸೂಚಿಸಿದೆ. ಈ ಸಂದರ್ಭದಲ್ಲಿ ವಿನಯ್ ಕುಲಕರ್ಣಿ ಪರ ವಕೀಲರು, ಧಾರವಾಡಕ್ಕೆ ಪ್ರವೇಶಕ್ಕೆ ಹಾಗೂ ಇಂದೇ ಬಿಡುಗಡಗೆ ಮನವಿ ಮಾಡಿಕೊಂಡಿದ್ದಾರೆ.
ಏನಿದು ಪ್ರಕರಣ?
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿಂಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿತ್ತು. ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನ ಕೋರ್ಟ್ ಖುಲಾಸೆಗೊಳಿತ್ತು. ಇನ್ನು ಇಬ್ಬರು ನಿರ್ದೋಷಿಗಳನ್ನ ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು.
2026ರ ಏಪ್ರಿಲ್ 17 ರಂದು 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ, ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದರು.ಇದನ್ನೂ ಓದಿ: ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
