ಮೈಸೂರು: ಕೊರೊನಾ ವೈರಸ್ ಹಾವಳಿಯ ನಡುವೆಯೇ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ಎದುರಾಗಿದೆ. ನಗರದಲ್ಲಿ ಕಳೆದ ಒಂದು ವಾರದಿಂದ ಹನ್ನೆರಡು ಕೊಕ್ಕರೆಗಳು ಸಾವನ್ನಪ್ಪಿವೆ.
ನೆರೆಯ ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದರಿಂದ ಕೊಕ್ಕರೆಗಳ ಸಾವು ಮೈಸೂರಿನಲ್ಲಿ ತಲ್ಲಣ ಉಂಟು ಮಾಡಿದೆ. ಮೈಸೂರಿನ ವಾರ್ಡ್ ನಂಬರ್ 55ರ ವ್ಯಾಪ್ತಿಯಲ್ಲೇ 12 ಕೊಕ್ಕರೆಗಳು ಸಾವನ್ನಪ್ಪಿದ್ದು, ಸ್ಥಳೀಯ ನಗರಪಾಲಿಕೆ ಸದಸ್ಯ ರಾಮಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಮಪ್ರಸಾದ್ ಅವರು ಮಹಾನಗರ ಪಾಲಿಕೆಯ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಾಗರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಡಾ.ನಾಗರಾಜ್ ಅವರು ಮೃತ ಕೊಕ್ಕರೆಗಳ ದೇಹದ ತುಣುಕುಗಳನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಕೊಕ್ಕರೆಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವಿರಬಹುದು ಎಂದು ಶಂಕಿಸಲಾಗಿದೆ.