ಹುಬ್ಬಳ್ಳಿ: ನಾಮಪತ್ರ ಸಲ್ಲಿಕೆಗೆ ಬಂದಿದ್ದ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರು ಸಮಯದ ಅಭಾವದ ಹಿನ್ನೆಲೆಯಲ್ಲಿ ಓಡೋಡಿ ಬಂದ ಪ್ರಸಂಗ ಧಾರವಾಡದ ಕುಂದಗೋಳದಲ್ಲಿ ನಡೆದಿದೆ.
ಇಂದು ಕುಂದಗೋಳ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಐ ಚಿಕ್ಕನಗೌಡರ ನಾಮಪತ್ರ ಸಲ್ಲಿಕೆಗೆ ಕುಂದಗೋಳ ತಹಶೀಲ್ದಾರ್ ಕಚೇರಿಗೆ ಆಗಮಿಸುತಿದ್ದರು. ಆದರೆ ನಾಮಪತ್ರ ಸಲ್ಲಿಸಲು ಕೇವಲ 5 ನಿಮಿಷ ಬಾಕಿಯಿತ್ತು. ಆದ್ದರಿಂದ ಅಭ್ಯರ್ಥಿ ಚಿಕ್ಕನಗೌಡರು ಓಡೋಡಿ ಕಚೇರಿ ಒಳಗೆ ಬಂದು ಕೊನೆ ಘಳಿಗೆಯಲ್ಲಿ ನಾಮಪತ್ರ ಸಲ್ಲಿಸಿದರು.
ಚಿಕ್ಕನಗೌಡರಿಗೆ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಾಥ್ ನೀಡಿದ್ದರು. ಭರ್ಜರಿ ಮೆರವಣಿಗೆ ಮೂಲಕ ಅಭ್ಯರ್ಥಿಯನ್ನು ತಹಶೀಲ್ದಾರ್ ಕಚೇರಿಗೆ ಕರೆತರಲಾಯ್ತು. ಆದ್ರೆ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಓಡೋಡಿ ಹೋಗುತ್ತಿದ್ದಂತೆ ಅವರ ಹಿಂದೆಯೇ ಬಿಜೆಪಿ ನಾಯಕರೂ ಕೂಡ ಓಡೋಡಿ ಕಚೇರಿಗೆ ಬಂದರು.
ಈ ಮೊದಲು ಚಿಕ್ಕನಗೌಡರು ಸಾಂಕೇತಿಕವಾಗಿ ಒಂದು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ.