– 100 ದಿನಗಳ ಸಂಭ್ರಮ ಡೈವರ್ಟ್ಗೆ ಸಂಚು
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ED) ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ(BJP) ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಹಿಂದೆ ನನ್ನ ಮೇಲೂ ದಾಳಿ ನಡೆಸಿ ಜೈಲಿಗೆ ಹಾಕಿದ್ದರು. ಈಗ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ. ಅವರ ಜೊತೆ ಪಕ್ಷ ಮತ್ತು ಸರ್ಕಾರ ಶೇಕಡಾ ನೂರರಷ್ಟು ಗಟ್ಟಿಯಾಗಿ ನಿಲ್ಲಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜಾರಕಿಹೊಳಿಗೆ ಸುತ್ತಿಕೊಳ್ಳುತ್ತಾ ರುವಾಂಡಾ ರಾಡಿ?
ನಾಳೆ ನಮ್ಮ ಸರ್ಕಾರಕ್ಕೆ 100 ದಿನ ತುಂಬುತ್ತಿದೆ. ಇದನ್ನು ಹಳ್ಳ ಹಿಡಿಸಲು ಮತ್ತು ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಇಂತಹ ತಂತ್ರ ರೂಪಿಸಿದೆ. ಈ ಹಿಂದೆ ನಾಗೇಂದ್ರ ಮೇಲೆಯೂ ದಾಳಿ ಮಾಡಿಸಿದ್ದರು. ಈಗ ಪ್ರಿಯಾಂಕ್ ಖರ್ಗೆ ಮತ್ತು ಕೆಪಿಎಸ್ಸಿ ವಿಚಾರದಲ್ಲೂ ವಿನಾಕಾರಣ ಹಿಂದೆ ಬಿದ್ದಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಜಾರಕಿಹೊಳಿಗೆ ಇಡಿ ಶಾಕ್| ದಕ್ಷಿಣ ಆಫ್ರಿಕಾದಲ್ಲಿ ಗಣಿಗಾರಿಕೆ ಕಂಪನಿ – ಪುತ್ರ, ಸಹೋದರಿ ನಿರ್ದೇಶಕಿ!
ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡುತ್ತಿಲ್ಲ? ರಾಹುಲ್ ಗಾಂಧಿ ಅವರ ಮೇಲೆ ಎಫ್ಐಆರ್ ದಾಖಲಿಸುತ್ತಾರೆ, ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡುತ್ತಾರೆ. ನಾವು ಯಾವ ಕಾಲದಲ್ಲಿದ್ದೇವೆ? ಇಂತಹ ಷಡ್ಯಂತ್ರಗಳಿಗೆ ನಾವು ಹೆದರುವುದಿಲ್ಲ, ನಮ್ಮ ಶಾಸಕರಿಗೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಗುಡುಗಿದರು.
