ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಭಾರೀ ಸಿದ್ಧತೆ ಮಾಡಿಕೊಂಡಿರುವ ಬಿಜೆಪಿ ತನ್ನ 150 ಹಾಲಿ ಸಂಸದರಿಗೆ ಟಿಕೆಟ್ ನೀಡದೇ ಇರಲು ನಿರ್ಧರಿಸಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಬಿಜಿಪಿ ಭಾರೀ ತಂತ್ರಗಳನ್ನು ರೂಪಿಸಿದ್ದು, ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರ ಸ್ಥಾಪಿಸುವ ವಿಶ್ವಾಸ ಹೊಂದಿರುವ ಬಿಜೆಪಿ ಪಕ್ಷದಲ್ಲಿ ಅನೇಕ ಬದಲಾವಣೆಗಳನ್ನು ಮಾಡಿದೆ. ಈ ಹಿನ್ನೆಲೆಯಲ್ಲಿ 150 ಹಾಲಿ ಸಂಸದರಿಗೆ ಟಿಕೆಟ್ ನೀಡದೇ ಇರುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಟಿಕೆಟ್ ನೀಡದೇ ಇರುವ ನಾಯಕರ ಪಟ್ಟಿಯಲ್ಲಿ ವಿಶೇಷವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಉಮಾ ಭಾರತಿ, ರಾಧಾ ಮೋಹನ್ ಸಿಂಗ್ ಸೇರಿದಂತೆ ಇನ್ನೂ ಹಲವು ಹಿರಿಯ ಮುಖಂಡರ ಹೆಸರು ಇದೆ ಎನ್ನಲಾಗಿದೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರವರು ತಮ್ಮ ಅನಾರೋಗ್ಯದ ಕಾರಣದಿಂದ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರೆ, ಜಲ ಸಂಪನ್ಮೂಲ ಸಚಿವೆ ಉಮಾಭಾರತಿ, ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಹಾಗೂ ಲೋಕಸಭಾ ಸ್ಪೀಕರ್ ಸುಮಿತ್ರ ಮಹಾಜನ್ ರವರು ಮುಂಬರುವ ಚುನಾವಣೆಯಲ್ಲಿ ಸ್ಫರ್ಧಿಸದಂತೆ ಸ್ವಂತ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಹಿರಿಯ ಮುಖಂಡರಾದ ಮುರಳಿ ಮನೋಹರ ಜೋಶಿ, ಶಾಂತ ಕುಮಾರ್ ಮತ್ತು ಬಿ.ಸಿ ಖಂಡೂರಿ ತಮ್ಮ ವಯಸ್ಸಿನ ಕಾರಣದಿಂದ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದು ಬಂದಿದೆ.