ಬೆಂಗಳೂರು: ರಾಜ್ಯದಲ್ಲಿ ಚುನಾವಣೆಯ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಎಲ್ಲ ಪಕ್ಷದ ನಾಯಕರು ಗೆಲುವಿಗಾಗಿ ನಾನಾ ರಾಜಕೀಯ ತಂತ್ರಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಪಡೆದುಕೊಂಡಿದ್ದು, ರಾಜ್ಯದ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಾ ಎಂಬ ಭಯವೊಂದು ಕಾಂಗ್ರೆಸ್ ಪಾಳಯದಲ್ಲಿ ಹುಟ್ಟಿಕೊಂಡಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕೆಂದು ಶತಾಗತಯ ಪ್ರಯತ್ನ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ತ್ರಿಪುರ, ನಾಗಾಲ್ಯಾಂಡ್ನಲ್ಲಿ ಬಿಜೆಪಿ ಅನುಸರಿದ ತಂತ್ರ ಅನುಕರಣೆ ಮಾಡಲು ಮುಂದಾಗುತ್ತಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗುತ್ತಿವೆ.
ಈಗಾಗಲೇ ಬಿಜೆಪಿಯ ಪ್ರಬಲ ನಾಯಕರನ್ನು ಎನ್ನಲಾದ ಆನಂದ್ ಸಿಂಗ್, ಬಿ.ನಾಗೇಂದ್ರ ಮತ್ತು ಅಶೋಕ್ ಖೇಣಿ ಅವರನ್ನು ಕಾಂಗ್ರೆಸ್ ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ರೀತಿಯಾಗಿ ಬೆಳಗಾವಿ ವಿಭಾಗದ ಪ್ರಮುಖ ಬಿಜೆಪಿ ನಾಯಕರಾದ ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಖುದ್ದು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಬಲ ಅಭ್ಯರ್ಥಿಗಳು ಕಾಂಗ್ರೆಸ್ ನತ್ತ ವಲಸೆ ಹೋಗುವುದನ್ನು ತಪ್ಪಿಸಲು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗೊಡೆಗೊಳಿಸಲು ನಿರ್ಧರಿಸಿದೆ ಅಂತಾ ಎನ್ನಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. 2013ರ ಚುನಾವಣೆಯಲ್ಲಿ ಉಮೇಶ್ ಕತ್ತಿ, ತಮ್ಮ ಪ್ರತಿ ಸ್ಪರ್ಧಿಯಾಗಿದ್ದ ಕಾಂಗ್ರೆಸ್ನ ರವಿ ಬಸವರಾಜ್ ಕರಲೆ ಅವರನ್ನು 57 ಸಾವಿರಕ್ಕೂ ಅಧಿಕ ಮತಗಳಿಂದ ಸೋಲಿಸಿ ಗೆಲುವನ್ನು ಸಾಧಿಸಿದ್ದರು. ಹೀಗಾಗಿ ಕಾಂಗ್ರೆಸ್ ಶಾಸಕ ಉಮೇಶ್ ಕತ್ತಿ ಅವರನ್ನು ಸೆಳೆಯುವ ತಂತ್ರವನ್ನು ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಹ ಬೆಳಗಾವಿಯ ಅರಭಾವಿ ವಿಧಾನಸಭಾ ಕ್ಷೇತ್ರದ ಪ್ರಬಲ ನಾಯಕರಾಗಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಶಾಸಕರಾಗಿದ್ದಾರೆ. 2004 ಮತ್ತು 2008ರಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರೆ, 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದಾರೆ. 2014ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು 75,221 ಮತಗಳ ಅಂತರದಿಂದ ಸೋಲಿಸಿ ವಿಜಯ ಮಾಲೆ ಧರಿಸಿದ್ದರು.