ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಂತೆ ಬಿಜೆಪಿ ನನ್ನನ್ನೂ ಕೊಲ್ಲಬಹುದು ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮವೊಂದರ ಜೊತೆಗೆ ಮಾತನಾಡಿದ ಅವರು, ನಾನು ಹತ್ಯೆಯಾಗುತ್ತೇನೆ ಎಂಬ ಭಯ ಕಾಡುತ್ತಿದೆ. ನನ್ನ ರಕ್ಷಣೆಗೆ ಇರುವ ಭದ್ರತಾ ಸಿಬ್ಬಂದಿ (ಪಿಎಸ್ಒ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.
ನನ್ನ ವಾಹನದ ಹಿಂದೆ, ಮುಂದೆ ಸಾಗುತ್ತಿರುವ ಪೊಲೀಸ್ ಸಿಬ್ಬಂದಿ ನಮ್ಮ ಕಾರ್ಯ ಚಟುವಟಿಕೆಯ ಕುರಿತಾದ ವರದಿಯನ್ನು ಪ್ರಧಾನಿ ಮೋದಿ ಅವರಿಗೆ ನೀಡುತ್ತಾರೆ. ಅಷ್ಟೇ ಅಲ್ಲದೆ ಅಂಗರಕ್ಷಕರೂ ಕೂಡ ಮೋದಿಗೆ ನನ್ನ ಎಲ್ಲ ಮಾಹಿತಿಯನ್ನು ನೀಡುತ್ತಾರೆ. ಈ ಮೂಲಕ ನನ್ನ ಜೀವನವು ಕೇವಲ ಎರಡೇ ನಿಮಿಷದಲ್ಲಿ ಮುಗಿದು ಹೋಗುತ್ತದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆ ಕೊನೆಯ ಹಂತದ ಮತದಾನ ನಾಳೆ ನಡೆಯಲಿದೆ. ಈ ನಡುವೆ ಅರವಿಂದ್ ಕೇಜ್ರಿವಾಲ್ ಅವರು ನೀಡಿದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ದೆಹಲಿ ಸಿಎಂ ಹೇಳಿಕೆಗೆ ಬಿಜೆಪಿ ಹಾಗೂ ಮೋದಿ ಅಭಿಮಾನಿಗಳು ಖಂಡನೆ ವ್ಯಕ್ತಪಡಿಸಿದ್ದಾರೆ.