ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ಹೆಚ್ಚಿನ ಸ್ಥಾನ ನೀಡಿ ಆಶೀರ್ವಾದ ಮಾಡಿದ್ದಾರೆ. ಆದರೆ ಸೂಕ್ತ ಬಹುಮತ ಪಡೆಯುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಚುನಾವಣೆಯಲ್ಲಿ ಜನರು ಬಿಜೆಪಿಗೆ ಜನರು ಹೆಚ್ಚಿನ ಸ್ಥಾನ ನೀಡಿ ಆಶೀರ್ವಾದ ಮಾಡಿದ್ದಾರೆ. ಆದರೆ ಪಕ್ಷ ಸೂಕ್ತ ಬಹುಮತ ಪಡೆಯುವಲ್ಲಿ ನಮ್ಮ ಲೆಕ್ಕಾಚಾರ ತಪ್ಪಿದೆ. ಗುಣಾಕಾರ ಭಾಗಾಕಾರವಾಗಿ ಬಹುಮತ ಸಂಖ್ಯೆ ಕಡಿಮೆಯಾಗಿದೆ. ಆದರೆ ಅಧಿಕಾರಕ್ಕಾಗಿ ಹಾವು ಮುಂಗುಸಿಯಂತಿದ್ದ ಜೆಡಿಎಸ್, ಕಾಂಗ್ರೆಸ್ ಒಂದಾಗಿದ್ದು, ಅಧಿಕಾರಕ್ಕಾಗಿ ಕೂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷ ಸದ್ಯ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪಕ್ಷದಿಂದ ಮೂಲೆಗುಂಪು ಮಾಡಿ ಜೆಡಿಎಸ್ ನೊಂದಿಗೆ ಕೈ ಜೋಡಿಸಿದೆ. ಇದು ಅನೈತಿಕ ಸಂಬಂಧವಾಗಿದ್ದು ಹೆಚ್ಚಿನ ದಿನ ಬಾಳದು. ಅಂದರೆ ಹಾಲು ಕುಡಿದು ಸಾಯುವವರಿಗೆ ನಾವೇಕೆ ವಿಷ ಹಾಕಬೇಕೆಂದು ಪರೋಕ್ಷವಾಗಿ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇದೇ ವೇಳೆ ಪೇಜಾವರ ಶ್ರೀಗಳು ನರೇಂದ್ರ ಮೋದಿ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕುರಿತು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಾಹಿತಿ ಕೊರತೆಯಿಂದ ಅವರು ಹೀಗೆ ಹೇಳಿಕೆ ನೀಡಿದ್ದಾರೆ. ಆದರೆ ಶ್ರೀ ಗಳ ಕುರಿತು ನನಗೆ ಅಪಾರ ನಂಬಿಕೆ ಇದೆ ಎಂದರು.