ರಾಮನಗರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ಕೈ ಶಾಸಕರನ್ನು ನನಗೆ ನೀಡುವಂತೆ ಹೇಳಿದ್ದರು ಎಂದು ಪರಿಷತ್ ಸದಸ್ಯ ಸಿಎಂ ಲಿಂಗಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಬಂದಿದ್ದಾಗ ಶಾ ಅಮಿತ್ ಶಾ ಅವರು ಇಂಧನ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಗೆ ದೂರವಾಣಿ ಮೂಲಕ ಕರೆ ಮಾಡಿ ಆಮಿಷ ಒಡ್ಡಿದ್ದರು ಎಂದು ತಿಳಿಸಿದರು.
ಅಮಿತ್ ಶಾ ಕರೆ ಮಾಡಿ 38 ಜನ ಶಾಸಕರನ್ನ ನೀನೆ ಇಟ್ಟುಕೋ, 4 ಜನರನ್ನ ನನಗೆ ಕೊಡು. ಇದರಿಂದ ನಿನಗೆ ನಾನು ಬಹಳ ದೊಡ್ಡ ಸಹಾಯ ಮಾಡುತ್ತೇನೆ ಎಂದಿದ್ದರು. ಆದರೆ ಅಮಿತ್ ಶಾ ಆಮಿಷಕ್ಕೆ ಡಿ.ಕೆ.ಶಿವಕುಮಾರ್ ಅವರು ಒಪ್ಪಲಿಲ್ಲ. ಬದಲಿಗೆ ನಾನು ಪಕ್ಕಾ ಕಾಂಗ್ರೆಸ್ಸಿಗ, ನನ್ನ ದೇಹದಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ವಿಚಾರದಲ್ಲಿ ನನ್ನ ಕ್ಷಮಿಸಿ ಎಂದು ಹೇಳಿದ್ದಾರೆ. ಈ ಇಬ್ಬರ ನಡುವಿನ ದೂರವಾಣಿ ಸಂಭಾಷಣೆ ಮಾಡುವಾಗ ಶಿವಕುಮಾರ್ ಜೊತೆಗೆ ನಾನೇ ಇದ್ದೆ ಎಂದು ಲಿಂಗಪ್ಪ ಹೇಳಿದರು.
ರಾಜ್ಯಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ನಿಂದ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಕಣಕ್ಕೆ ಇಳಿದಿದ್ದರು. ಈ ವೇಳೆ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮಿಸಿದ್ದರು. ಡಿಕೆ ಶಿವಕುಮಾರ್ ರೆಸಾರ್ಟ್ ನಲ್ಲಿ ಕೈ ಶಾಸಕರನ್ನು ನೋಡಿಕೊಳ್ಳುವ ಉಸ್ತುವಾರಿ ವಹಿಸಿಕೊಂಡಿದ್ದರು.