ಹಾಸನ: ಬಿಜೆಪಿಯವರಿಗೆ ದೈವಾನುಗ್ರಹವಿಲ್ಲ ಹೀಗಾಗಿ ಅವರು ಎಷ್ಟೇ ಪ್ರಯತ್ನ ಪಟ್ಟರೂ ಸಹ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದಕ್ಕೆ ಆಗುವುದಿಲ್ಲವೆಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಬದಲು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲಮನ್ನಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಬೇಕು. ಬಿಜೆಪಿಯವರಿಗೆ ದೈವಾನುಗ್ರಹ ಇಲ್ಲ. ಹೀಗಾಗಿ ಅವರು ಎಷ್ಟೇ ಪ್ರಯತ್ನಪಟ್ಟರೂ ಸರ್ಕಾರ ಈ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲವೆಂದು ಹೇಳಿದರು.
ಮಳೆಯಿಂದ ಆಗಿರುವ ಹಾನಿಗೆ ಪರಿಹಾರದ ಹಣ ಬಿಡುಗಡೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಬಳಿ ಹೋಗಲು ರಾಜ್ಯ ಬಿಜೆಪಿ ನಾಯಕರಿಗೆ ತಾಕತ್ತಿಲ್ಲ. ಅದನ್ನು ಬಿಟ್ಟು ನಮಗೆ 300 ಕೋಟಿ ಕೊಡಿ ಸರ್ಕಾರ ಬೀಳಿಸ್ತೀವಿ ಅಂತ ಬೇಡಿಕೆ ಇಟ್ಟಿದ್ದಾರೆ. ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ದಿನದಿಂದಲೂ ಸರ್ಕಾರ ಉರುಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಲೇ ಇದ್ದಾರೆ. ಏನೇ ಮಾಡಿದರೂ ಜೆಡಿಎಸ್ ಶಾಸಕರನ್ನು ಖರೀದಿ ಮಾಡಲು ಸಾಧ್ಯವಿಲ್ಲವೆಂದು ಗುಡುಗಿದರು.
ಭಾನುವಾರ ಹಾಸನದ ಹಾಲು ಒಕ್ಕೂಟಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಅಂದು ಐಸ್ ಕ್ರೀಂ ಘಟಕ ಹಾಗೂ ಒಡೆಯರ ಕಾಲದ ನಾಲೆ ಕಾಮಗಾರಿ ಹಾಗೂ ಮಹಿಳಾ ಕಾಲೇಜು ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುತ್ತಾರೆ ಎಂದು ತಿಳಿಸಿದರು.
ಶನಿವಾರ ಹಾಸನದ ಹೊರವಲಯದ ಹೊಯ್ಸಳ ರೆಸಾರ್ಟ್ ನಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಸನದಲ್ಲಿ ಶನಿವಾರ ಜೆಡಿಎಸ್ ಶಾಸಕರ ತುರ್ತು ಸಭೆ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv