ಬೆಂಗಳೂರು: ಒಂದು ಕಡೆ ದೋಸ್ತಿ ಸರ್ಕಾರದಲ್ಲಿ ಮುಸುಕಿನ ಗುದ್ದಾಟ ಮುಂದುವರಿದಿದ್ರೆ, ಮತ್ತೊಂದ್ಕಡೆ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇವತ್ತು ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಡೆಯಲಿದೆ.
ಗಾಯತ್ರಿ ವಿಹಾರನಲ್ಲಿ ಮಧ್ಯಾಹ್ನ 12 ಗಂಟೆಗೆ ರಾಜ್ಯ ಕಾರ್ಯಕಾರಿಣಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮೈತ್ರಿ ಸರ್ಕಾರ ರಚನೆಯನ್ನು ಖಂಡಿಸುವುದು ಕಾರ್ಯಕಾರಿಣಿಯ ಮೊದಲ ನಿರ್ಣಯವಾಗಿದ್ದು, ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸೋದು 2ನೇ ನಿರ್ಣಯವಾಗಿದೆ ಎಂದು ತಿಳಿದು ಬಂದಿದೆ.
ಕೇಂದ್ರ ಸಚಿವರಾದ ಅನಂತಕುಮಾರ್, ಡಿವಿ ಸದಾನಂದ ಗೌಡ, ಜಿಗಜಿಣಗಿ, ಅನಂತಕುಮಾರ್ ಹೆಗಡೆ, ಮುರಳೀಧರ್ ರಾವ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಮೈತ್ರಿ ಸರ್ಕಾರ ರಚನೆಯನ್ನ ಖಂಡಿಸಿ ಹೋರಾಟ, ಮೋದಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆ ಇದೆ. ಜೊತೆಗೆ ರಾಜ್ಯ ಬಿಜೆಪಿ ವಿವಿಧ ಮೋರ್ಚಾಗಳ, ವಿವಿಧ ಕಾರ್ಯಕ್ರಮಗಳ ವರದಿ ಕೂಡ ಸಲ್ಲಿಕೆಯಾಗಲಿದೆ.