ಬೆಂಗಳೂರು: ಬಿಜೆಪಿ (BJP) ರಾಜ್ಯಧ್ಯಕ್ಷರಾದ ನಂತರ ಅತೃಪ್ತರನ್ನು ವಿಶ್ವಾಸಕ್ಕೆ ಪಡೆದುಕೊಳ್ಳುವ ಕಸರತ್ತಿಗೆ ಬಿ.ವೈ ವಿಜಯೇಂದ್ರ (B.Y Vijayendra) ಮುಂದಾಗಿದ್ದಾರೆ. ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿ ಅವರು ಮಾತುಕತೆ ನಡೆಸಿದ್ದಾರೆ.
ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ನೇಮಕದಿಂದ, ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅಸಮಧಾನಗೊಂಡಿದ್ದರು. ಈ ಬಗ್ಗೆ ರಮೇಶ್ ಜಾರಕಿಹೊಳಿ ಜೊತೆ ಬುಧವಾರ ಆರ್ಎಸ್ಎಸ್ ಮುಖಂಡ ಮುಕುಂದ್ ಚರ್ಚಿಸಿದ್ದರು. ಈ ಬೆನ್ನಲ್ಲೇ ರಮೇಶ್ ಅವರನ್ನು ಭೇಟಿಯಾಗಿ ವಿಜಯೇಂದ್ರ ಸುಮಾರು ಅರ್ಧ ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಒಂದೇ ಹುದ್ದೆಗೆ ಇಬ್ಬರ ಗುದ್ದಾಟ- ಅಕ್ಕಪಕ್ಕ ಕುರ್ಚಿ ಹಾಕಿ ಕುಳಿತ ಸರ್ಕಾರಿ ಅಧಿಕಾರಿಗಳು
ಬಳಿಕ ಮಾತಾಡಿದ ವಿಜಯೇಂದ್ರ ಅವರು, ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು ಅಪಾರ್ಥ ಮಾಡಿಕೊಳ್ಳದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಒಟ್ಟಾಗಿ ಶ್ರಮಿಸೋಣ ಎಂದು ರಮೇಶ್ ಜಾರಕಿಹೊಳಿ ಅವರಿಗೆ ತಿಳಿಸಿದ್ದೇನೆ. ಅವರ ನಡೆ ಬಗ್ಗೆ ಹಲವಾರು ರೀತಿಯ ಚರ್ಚೆಗಳು ನಡೆಯುತ್ತಿದ್ದವು. ಕೆಲವು ಸಂದರ್ಭದಲ್ಲಿ ಅವರು ಅಸಮಾಧಾನವನ್ನೂ ತೋಡಿಕೊಂಡಿದ್ದರು. ಇಂದು ಅವರು ಕೆಲವು ನೋವುಗಳನ್ನೂ ತೋಡಿಕೊಂಡಿದ್ದಾರೆ. ನಾನು ಬಿಜೆಪಿ ರಾಜ್ಯಾಧ್ಯಕ್ಷನಾದ ಮೇಲೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದೇನೆ ಎಂದಿದ್ದಾರೆ.
ಪಕ್ಷದ ರಾಷ್ಟ್ರೀಯ ನಾಯಕರು, ವರಿಷ್ಠರು ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ. ಎಲ್ಲರೂ ಜೊತೆಯಾಗಿ ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸುತ್ತೇವೆ. ಕಾರ್ಯಕರ್ತನಾಗಿ, ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುವ ಮೂಲಕ, ಸಂಘಟನೆಗೆ ಒತ್ತು ಕೊಡುತ್ತೇನೆ. ಕಾರ್ಯಕರ್ತರಿಗೆ ಉತ್ಸಾಹ ತುಂಬುವ ಮೂಲಕ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆದ್ದು ಅವರನ್ನು ದೆಹಲಿಗೆ ಕಳಿಸುವ ಮೂಲಕ ನಾನು ಕರ್ತವ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ.
ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರು ಈ ಜವಾಬ್ದಾರಿ ನೀಡಿದ್ದಾರೆ. ಯಾರೇನೇ ಹೇಳಿದರೂ ಅದನ್ನು ಆಶೀರ್ವಾದ ಎಂದು ಭಾವಿಸಿ, ಎಲ್ಲರ ಮನವೊಲಿಸಿ ಅವರ ಸಹಕಾರದೊಂದಿಗೆ ಮುನ್ನಡೆಯುತ್ತೇನೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಪಿಗಳು ಹಾಜರಾದ ಫೈನಲ್ ಹೊರತುಪಡಿಸಿ ಎಲ್ಲಾ ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದೆ: ಮಮತಾ ಕಿಡಿ