– ಎಚ್ಡಿಕೆ ಪಾರ್ಟ್ ಟೈಂ ಸಿಎಂ
ಗದಗ: ರಾಜ್ಯದಲ್ಲಿ ಮೊನ್ನೆವರೆಗೂ ವಿಲನ್ ಸರ್ಕಾರವಿತ್ತು. ಹಿಂದೂ ಕಾರ್ಯಕರ್ತರು ಮೃತಪಟ್ಟರೂ ಅವರಿಗೆ ಕಣ್ಣೀರು ಬರಲಿಲ್ಲ. ಅವರು ಸಮಾಜ ಒಡೆದು ವಿಲನ್ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕೆಣಕಿದ್ದಾರೆ.
ನಗರದಲ್ಲಿ ಮಂಗಳವಾರ ನಡೆದ ಬಿಜೆಪಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪಾರ್ಟ್ ಟೈಂ ಸಿಎಂ. ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವೆ ಎಚ್.ಡಿ.ಕುಮಾರಸ್ವಾಮಿ ಸೈಡ್ ಆ್ಯಕ್ಟರ್ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಈಗ ಹೀರೋ ಸರ್ಕಾರ ಬಂದಿದೆ. ಸಿಎಂ ಬಿ.ಎಸ್.ಯಡಿಯೂರಪ್ಪನವರು ನೆರೆ-ಬರ ಸವಾಲುಗಳ ನಡುವೆ ಸರ್ಕಾರ ರಚನೆ ಮಾಡಿದ್ದಾರೆ. ಆದರೂ ಎರಡೂ ಸವಾಲುಗಳನ್ನ ಸಮರ್ಪಕವಾಗಿ ನಿಭಾಯಿಸುತ್ತಿದ್ದಾರೆ. ಕಳೆದ ವರ್ಷ ಸಂಭವಿಸಿದ ಪ್ರವಾಹದಲ್ಲಿ ಅನೇಕರು ಮೃತಪಟ್ಟಿದ್ದರು. ಅಷ್ಟೇ ಅಲ್ಲದೆ ಅಪಾರ ಪ್ರಮಾಣದ ಆಸ್ತಿ, ಮನೆಯನ್ನು ಸಂತ್ರಸ್ತರು ಕಳೆದುಕೊಂಡಿದ್ದರು. ಆಗ ಅಧಿಕಾರದಲ್ಲಿದ್ದ ಎಚ್.ಡಿ.ಕುಮಾರಸ್ವಾಮಿ ಸಮರ್ಪಕ ಪರಿಹಾರ ಘೋಷಣೆ ಮಾಡಲಿಲ್ಲ. ಆದರೆ ಈಗ ಬಿ.ಎಸ್.ಯಡಿಯೂರಪ್ಪ ಅವರು ಮನೆಗಳ ನಿರ್ಮಾಣಕ್ಕೆ 5 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದ್ದಾರೆ. ಇದೇ ಬಿಜೆಪಿ ಸರ್ಕಾರದ ಕಾರ್ಯವೈಖರಿ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಮಾಡುವುದೇ ನಮ್ಮ ಗುರಿ. ರಾಜ್ಯದಲ್ಲಿ ಪಕ್ಷ ಸಂಘನೆ ಮತ್ತಷ್ಟು ಚುರುಕುಗೊಳಿಸಲಾಗುತ್ತಿದೆ. ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.