ಉಡುಪಿ: ಕಾಂಗ್ರೆಸ್ ರಾಜಕೀಯ ಒತ್ತಡ ಬಳಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರ್ಗಿಯವರನ್ನು ವರ್ಗಾವಣೆ ಮಾಡಲು ಯತ್ನಸುತ್ತಿದ್ದು, ಒಂದು ವೇಳೆ ಎಸ್ಪಿ ಅವರನ್ನು ವರ್ಗಾವಣೆ ಮಾಡಿದರೆ ಜಿಲ್ಲೆಯಲ್ಲಿ ಹೋರಾಟ ನಡೆಸುತ್ತೇವೆ ಎಂದು ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 10 ರಂದು ಕಾಂಗ್ರೆಸ್ ಹಮ್ಮಿಕೊಂಡಿದ್ದ ಭಾರತ್ ಬಂದ್ ವೇಳೆ ಕಾರ್ಯಕರ್ತರು ಬಲವಂತವಾಗಿ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿಸಿದ್ದಲ್ಲದೇ, ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರ್ಗಿಯವರು ಉದ್ರಿಕ್ತರ ಮೇಲೆ ಲಾಠಿ ಚಾರ್ಜ್ ನಡೆಸಲು ಆದೇಶ ಕೊಟ್ಟಿದ್ದರು. ಆದರೆ ಆಳುವ ಪಕ್ಷ ಹೇಳಿದಂತೆ ಎಸ್ಪಿ ನಿಂಬರ್ಗಿ ನಡೆದುಕೊಂಡಿಲ್ಲ ಎಂದು ಅವರನ್ನು ವರ್ಗಾವಣೆ ಮಾಡಲು ಭಾರೀ ರಾಜಕೀಯ ಪಿತೂರಿ ನಡೆಯುತ್ತಿದೆ. ಇತ್ತೀಚೆಗೆ ಸಚಿವೆ ಜಯಮಾಲಾಗೆ ಉಡುಪಿ ಕಾಂಗ್ರೆಸ್ ಕಾರ್ಯಕರ್ತರು ಎಸ್ಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ಹೇಳಿದರು.
ಒಂದು ವೇಳೆ ರಾಜಕೀಯ ಒತ್ತಡದಿಂದ ಎಸ್ಪಿಯವರನ್ನು ವರ್ಗಾವಣೆ ಮಾಡಿದರೆ, ಬಿಜೆಪಿ ಜಿಲ್ಲೆಯಾದ್ಯಂತ ಹೋರಾಟ ನಡೆಸುತ್ತದೆ. ಅಲ್ಲದೇ ಈಗಾಗಲೇ ನಾವು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಸ್ಪಷ್ಟವಾಗಿ ಹೇಳಿದ್ದೇವೆ. ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಲಿ. ವರ್ಗಾವಣೆ ಮಾಡುವುದು ಸರ್ಕಾರದ ಹಕ್ಕು. ಸರ್ಕಾರದ ಹಕ್ಕನ್ನು ನಾವು ಪ್ರಶ್ನೆ ಮಾಡುವುದಿಲ್ಲ. ಆದರೆ ರಾಜಕೀಯ ಪ್ರೇರಿತ ವರ್ಗಾವಣೆ ಮಾಡಿದರೇ, ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv