ಚಿತ್ರದುರ್ಗ: ಉಪ ಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ, ಈ ಚುನಾವಣೆಯಲ್ಲಿಯೂ ಕಾಂಗ್ರೆಸ್ ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಧೂಳಿಪಟವಾಗಲಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಚಿತ್ರದುರ್ಗದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ದೇಶದಲ್ಲಿ ಬಿಜೆಪಿ ಪಕ್ಷ ಬಹಳ ಸಮರ್ಥವಾಗಿದೆ ಹೀಗಾಗಿ ಅಕ್ಟೋಬರ್ 21 ರಂದು ನಡೆಯುವ ಉಪ ಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅಲ್ಲದೆ ಕಾಂಗ್ರೆಸ್, ಜೆಡಿಎಸ್ ನಾಯಕರು ಯಾವುದೇ ಕಸರತ್ತು ಮಾಡಿದರೂ ಸಹ ಈ ಚುನಾವಣೆಯಲ್ಲಿ ಅವರು ಗೆಲ್ಲಲು ಸಾಧ್ಯವಿಲ್ಲ ಎಂದರು.
ಇಡೀ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಧೂಳಿಪಟವಾಗಿದೆ. ಈಗ ನಡೆಯುವ ಉಪಚುನಾವಣೆಯಲ್ಲೂ ಆ ಪಕ್ಷ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಕರ್ನಾಟಕ ಉಪಚುನಾವಣೆ, ಮಹಾರಾಷ್ಟ್ರ, ಹರ್ಯಾಣ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸುದ್ದಿಗೋಷ್ಠಿ ನಡೆಸಿ ಇಂದು ದಿನಾಂಕ ಪ್ರಕಟಿಸಿದ್ದಾರೆ. ಕರ್ನಾಟಕದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಸೇರಿದಂತೆ ಎರಡು ರಾಜ್ಯಗಳಲ್ಲಿ ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿದ್ದು, 24ಕ್ಕೆ ಮತ ಎಣಿಕೆ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.
ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳು
ಗೋಕಾಕ್, ಅಥಣಿ, ಕಾಗವಾಡ, ಹಿರೆಕೆರೂರು, ಯಲ್ಲಾಪುರ, ಯಶವಂತಪುರ, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆಆರ್ ಪೇಟೆ, ಮಹಾಲಕ್ಷ್ಮಿ ಲೇಔಟ್, ಕೆಆರ್ ಪುರ, ರಾಣೇಬೆನ್ನೂರು, ಚಿಕ್ಕಬಳ್ಳಾಪುರದಲ್ಲಿ ಉಪಚುನಾವಣೆ ನಡೆದರೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ರಾಯಚೂರಿನ ಮಸ್ಕಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುದಿಲ್ಲ.