ಜೈಪುರ: ರಾಜಸ್ಥಾನದ ಜೋಧ್ಪುರ ವಿಮಾನ ನಿಲ್ದಾಣದಲ್ಲಿ ಹಾರಾಟಕ್ಕೆ ಸಿದ್ದವಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿದ್ದರಿಂದ ಏರ್ ಇಂಡಿಯಾ ಸೇರಿದಂತೆ ಎಲ್ಲಾ ವಿಮಾನಗಳ ಹಾರಾಟವನ್ನು ವಿಮಾನ ನಿಲ್ದಾಣ ಅಧಿಕಾರಿಗಳು ರದ್ದುಗೊಳಿಸಿದ್ದಾರೆ.
ಜೋಧ್ಪುರದಿಂದ ದೆಹಲಿಗೆ ಹೊರಡಲಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರುವುದಾಗಿ ಕರೆ ಬಂದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣ ಅಧಿಕಾರಿಗಳು ಜೋಧ್ಪುರದಿಂದ ಹೊರಡಬೇಕಾಗಿದ್ದ ಎಲ್ಲಾ ವಿಮಾನಗಳ ಹಾರಾಟವನ್ನು ತಡೆಹಿಡಿದ್ದಾರೆ. ಅಲ್ಲದೇ ಏರ್ ಇಂಡಿಯಾ ವಿಮಾನವನ್ನು ಭದ್ರತಾ ಪಡೆಗಳು ತೀವ್ರವಾಗಿ ತಪಾಸಣೆ ನಡೆಸುತ್ತಿವೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.
ಜೋಧ್ಪುರ ವಿಮಾನ ನಿಲ್ದಾಣವು ಭಾರತೀಯ ವಾಯುಪಡೆಯ ವಾಯು ನೆಲೆಗೆ ತಾಗಿಕೊಂಡೇ ಇರುವುದರಿಂದ, ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಜೋಧ್ಪುರ ವಿಮಾನನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವಲ್ಲದೇ, ಜೆಟ್ ಏರ್ ವೇಸ್ ಹಾಗೂ ಸ್ಪೈಸ್ ಜೆಟ್ ವಿಮಾನ ಸಂಸ್ಥೆಗಳ ವಿಮಾನಗಳನ್ನು ಸಹ ತಪಾಸಣೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ.
ಸದ್ಯ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರನ್ನು ಪೊಲೀಸರು ವ್ಯಾಪಕ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv