ಬೆಂಗಳೂರು: ಮೂರು ಪ್ರತ್ಯೇಕ ಪ್ರಕರಣದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಬಾಲಕ ಸೇರಿದಂತೆ ಎರಡು ಜಾನುವಾರುಗಳು ಸಾವನ್ನಪ್ಪಿವೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಚಿಕ್ಕಕಡಬೂರು ಗ್ರಾಮದ ಬಸವರಾಜ್ ಕುರುಬರ್ (15) ಮೃತ ಬಾಲಕ. ಹೊಲದಲ್ಲಿನ ಕುರಿ ಹಟ್ಟಿಗೆ ಹೋಗುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ತಂತಿ ತಗುಲಿ ಸ್ಥಳದಲ್ಲೇ ಅಸುನೀಗಿದ್ದಾನೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕ ಬಲಿಯಾಗಿದ್ದಾನೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಉದ್ರಿಕ್ತ ಗ್ರಾಮಸ್ಥರು ಬಳಗಾನೂರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಯಳವಟ್ಟಿ ಗ್ರಾಮದ ರೈತ ಕೆಂಚಪ್ಪ ವಗ್ಗಣ್ಣನವರಿಗೆ ಸೇರಿದ ಹಸು ಹಾಗೂ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ಎತ್ತು ಗದ್ದೆಯಲ್ಲಿ ಮೇಯಲು ಹೋದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಸ್ಥಳದಲ್ಲೆ ಅಸುನೀಗಿವೆ. ಈ ಕುರಿತು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು. ಪೊಲೀಸರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದಲ್ಲದೆ ಹಲವು ಕಡೆ ವಿದ್ಯುತ್ ತಂತಿ ತುಂಡಾಗಿ ಪದೇ ಪದೇ ಅನಾಹುತಗಳು ಸಂಭವಿಸುತ್ತಿದ್ದು. ಅಧಿಕಾರಿಗಳು ಎಚ್ಚೆತ್ತುಕೊಂಡು, ಸರಿಪಡಿಸುವ ಕಾರ್ಯ ಕೈಗೊಳ್ಳಬೇಕಾಗಿದೆ.