ಚಿಕ್ಕಬಳ್ಳಾಪುರ: ರಂಜಾನ್ ಹಬ್ಬಕ್ಕೆ ಬಟ್ಟೆ ಖರೀದಿಸಲು ಹೋದ ಬಾಲಕನ ಮೇಲೆ ಬಸ್ ಹರಿದ ಪರಿಣಾಮ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.
ಕೀರ್ತೀ ನಗರದ ನಿವಾಸಿಯಾದ ಜುನೈದ್ (12) ಮೃತ ದುರ್ದೈವಿ. ನಗರದ ಚೇಳೂರು ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಬಿ ಕೊತ್ತಕೋಟ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಆದರೆ ಅಲ್ಲೇ ರಸ್ತೆ ಪಕ್ಕದಲ್ಲಿ ಸೈಕಲ್ ಮೇಲೆ ಕೂಡ ಬಸ್ ಹರಿದಿದೆ. ಪರಿಣಾಮ ಸೈಕಲ್ ನಲ್ಲಿದ್ದ ಜುನೈದ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
- Advertisement 2
ಈ ಘಟನೆಯಲ್ಲಿ ಮತ್ತೊಬ್ಬ ಬಾಲಕ ಸೈಯದ್ ತಲೆಗೆ ತೀವ್ರವಾಗಿ ಗಾಯವಾಗಿದ್ದು, ಆತನನ್ನು ಸಮೀಪದ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಇನ್ನೂ ಬಾಲಕ ಸಾವನ್ನಪ್ಪಿದ್ದ ಸುದ್ದಿ ತಿಳಿದ ಮೃತನ ಸಂಬಂಧಿಕರು ಹಾಗೂ ಸ್ಥಳೀಯ ಸಾರ್ವಜನಿಕರು ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
- Advertisement 3
ಅಪಘಾತ ನಂತರ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮತ್ತೊಂದೆಡೆ ಬಾಲಕನನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
- Advertisement 4
ಕಲ್ಲು ತೂರಾಟ ನಡೆಸಿದ ಪರಿಣಾಮ ಖಾಸಗಿ ಬಸ್ ನ ಗಾಜುಗಳ ಸಂಪೂರ್ಣ ಪುಡಿ ಪುಡಿಯಾಗಿವೆ. ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಚಿಂತಾಮಣಿ ನಗರ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.