ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖಂಡ ಕೆ.ಎಸ್.ಈಶ್ವರಪ್ಪನವರ ಮುಖ್ಯಮಂತ್ರಿಯಾಗುವ ಕನಸು ನನಸಾಗುವುದಿಲ್ಲವೆಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದ ವಿಸ್ತರಣೆಯ ಬಳಿಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅಲ್ಲದೇ ಬಿಜೆಪಿಯವರಿಗೂ ಸ್ಪಷ್ಟ ಬಹುಮತ ಬಂದಿಲ್ಲ. ಹೀಗಿದ್ದರೂ ಅವರು ಏಕೆ ಕನಸು ಕಾಣುತ್ತಿದ್ದಾರೆಂದು ನಮಗೆ ಗೊತ್ತಿಲ್ಲ. ಯಡಿಯೂರಪ್ಪ ಹಾಗೂ ಈಶ್ವರಪ್ಪನವರ ಸಿಎಂ ಆಗಬೇಕು ಎನ್ನುವ ಕನಸು ನನಸಾಗುವುದಿಲ್ಲ. ಯಾವುದೇ ತೊಂದರೆ ಇಲ್ಲದೇ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ಟಾಂಗ್ ನೀಡಿದರು.
ಯಾವುದೇ ಕಾರಣಕ್ಕೂ ನಮ್ಮ ಸಮ್ಮಿಶ್ರ ಸರ್ಕಾರ ಬೀಳುವುದಿಲ್ಲ. ಅಲ್ಲದೇ ನನ್ನ ವಿರುದ್ಧ ಯಾರೂ ಸಹ ಹೈಕಮಾಂಡ್ಗೆ ದೂರು ನೀಡಿಲ್ಲ. ಇದು ಕೇವಲ ಊಹಾಪೋಹವಾಗಿದೆ. ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರ ಹಿತವನ್ನು ಕಡೆಗಣಿಸಿಲ್ಲ. ನಮ್ಮ ಪಕ್ಷದ ಶಾಸಕರು ಮಂತ್ರಿ ಮಂಡಲದ ವಿಸ್ತರಣೆ ಬಗ್ಗೆ ಅವಸರ ಮಾಡಿಲ್ಲ. ಇದಲ್ಲದೇ ಇಂದಿರಾ ಕ್ಯಾಂಟೀನ್ಗೆ ಅನುದಾನದ ಕೊರತೆ ಇಲ್ಲ. ಆದರೆ ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಚಿವ ಸಂಪುಟದ ಬಗ್ಗೆ ಇದೇ 5ನೇ ತಾರೀಖಿನಂದು ಸಮನ್ವಯ ಸಮಿತಿಯಲ್ಲಿ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದರು.
ಲೋಕ್ಪಾಲ್ ಮಸೂದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಹೊರಗಡೆ ಭ್ರಷ್ಟಾಚಾರದ ಬಗ್ಗೆ ಭಾರೀ ಮಾತನಾಡುತ್ತಾರೆ. ಆದರೆ ಪ್ರಧಾನಿ ಈ ಲೋಕ್ಪಾಲ್ ಮಸೂದೆಯನ್ನೇ ಏಕೆ ಜಾರಿಗೆ ಮಾಡುತ್ತಿಲ್ಲವೆಂದು ಪ್ರಶ್ನಿಸಿದರು. ಇದೇ ವೇಳೆ ಕಬ್ಬು ಬೆಳಗಾರರ ಕುರಿತು ಮಾತನಾಡಿ, ಶೀಘ್ರವೇ ಕಬ್ಬಿನ ಬಾಕಿ ಹಣವನ್ನು ಕೊಡಿಸಲಾಗುತ್ತದೆ. ಅಲ್ಲದೇ ಕೇಂದ್ರ ಸರ್ಕಾರದ ಎಫ್ಆರ್ಪಿ ದರದಂತೆ ಕಪ್ಪು ಹರಿಯಲು ಸೂಚನೆ ನೀಡುತ್ತೇವೆಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv