ಬೆಂಗಳೂರು: 2016ರಿಂದ ಸರ್ಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿದ್ದ ಟಿಪ್ಪು ಜಯಂತಿಯನ್ನು ಯಡಿಯೂರಪ್ಪ ನೇತೃತ್ವದ ಸರ್ಕಾರ ರದ್ದುಗೊಳಿಸಿದೆ.
2016 ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಯನ್ನು ಸಿದ್ದರಾಮಯ್ಯ ಅವರ ಸರ್ಕಾರ ಜಾರಿಗೆ ತಂದಿತ್ತು. ಮೊದಲು ಟಿಪ್ಪು ಜಯಂತಿಯನ್ನ ಅಲ್ಪಸಂಖ್ಯಾತ ಇಲಾಖೆಯಿಂದ ಆಚರಣೆ ಮಾಡಲಾಗುತ್ತಿದ್ದು, ಆ ಬಳಿಕ ಕನ್ನಡ ಸಂಸ್ಕøತಿ ಇಲಾಖೆಯಿಂದ ಜಯಂತಿ ಆಚರಿಸಲಾಗುತ್ತಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರವೂ ಆಚರಣೆಯನ್ನು ಮುಂದುವರಿಸಿತ್ತು.
2018ರ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸುವುದಾಗಿ ಹೇಳಿತ್ತು. ಅಷ್ಟೇ ಅಲ್ಲದೇ ಸರ್ಕಾರದ ವತಿಯಿಂದಲೇ ಟಿಪ್ಪು ಜಯಂತಿ ಆಚರಿಸುತ್ತಿರುವ ಬಗ್ಗೆ ಬಿಜೆಪಿ ನಾಯಕರು ಪ್ರತಿಭಟಿಸಿದ್ದರು.
ಬೋಪಯ್ಯ ಮನವಿ: ಮಡಿಕೇರಿಯಲ್ಲಿ ಟಿಪ್ಪು ಜಯಂತಿ ವೇಳೆ ಘರ್ಷಣೆ ನಡೆದಿತ್ತು ಈ ಹಿನ್ನೆಲೆಯಲ್ಲಿ ಕೆ.ಜಿ.ಬೋಪಯ್ಯ ಅವರು ಜಯಂತಿ ರದ್ದತಿಗೆ ಮನವಿ ಮಾಡಿದ್ದರು. ಕೊಡಗು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಚರಣೆ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಕಾರ್ಯಕ್ರಮ ಆಚರಣೆ ವೇಳೆ ಸಾವು ಕೂಡ ಸಂಭವಿಸಿತ್ತು. ಸಾರ್ವಜನಿಕ ಆಸ್ತಿ ಪಾಸ್ತಿಗೂ ಕೂಡ ಅಪಾರ ಹಾನಿಯಾಗಿತ್ತು. ಇಂದಿಗೂ ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ಇದ್ದು, ಜನರ ನಡುವಿನ ಸಾಮರಸ್ಯ ಹದಗೆಟ್ಟಿದೆ. ಆದ್ದರಿಂದ ಟಿಪ್ಪು ಜಯಂತಿಯನ್ನ ಸರ್ಕಾರದಿಂದ ಆಚರಣೆ ಮಾಡುವ ಆದೇಶವನ್ನು ಕೂಡಲೇ ರದ್ದುಪಡಿಸಲು ಅಗತ್ಯ ಆದೇಶ ನೀಡಲು ಮನವಿ ಮಾಡಿದ್ದರು.
ಬೋಪಯ್ಯ ಅವರ ಮನವಿಯನ್ನು ಜುಲೈ 29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿತ್ತು. ಸಚಿವ ಸಂಪುಟ ರಾಜ್ಯಾದ್ಯಂತ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನ ರದ್ದುಗೊಳಿಸಲು ಆದೇಶ ಮಾಡಿದೆ. ಈ ಕುರಿತು ಜುಲೈ 30 ರಂದು ಅಧಿಕೃತ ಆದೇಶ ನೀಡಲಾಗಿದೆ.
— CM of Karnataka (@CMofKarnataka) July 30, 2019