ಬೆಂಗಳೂರು: ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದೆ. ಆದರೆ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿಯವರಿಗೆ ಟಿಕೆಟ್ ಕೈ ತಪ್ಪಿದ ಕುರಿತು ಈಗಾಗಲೇ ಸಾಕಷ್ಟು ಚರ್ಚೆಯಾಗಿದೆ. ದೆಹಲಿಯವರು ಟಿಕೆಟ್ ಫೈನಲ್ ಮಾಡಿದ್ದು, ಅವರ ತೀರ್ಮಾನವೇ ಅಂತಿಮ ಅಂದ್ರು.
ನಾಳೆ ಶಿವಮೊಗ್ಗದಲ್ಲಿ ಪುತ್ರ ಬಿ.ಎಸ್ ರಾಘವೇಂದ್ರ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಶಿವಮೊಗ್ಗಕ್ಕೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ. ಹಾಗೆಯೇ ತೇಜಸ್ವಿನಿ ಅವರು ಬರಲು ಒಪ್ಪಿಕೊಂಡಿದ್ದಾರೆ. ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಬೆಂಗಳೂರು ದಕ್ಷಿಣದಿಂದ ಟಿಕೆಟ್ ಕೊಟ್ಟಿರುವುದನ್ನು ಈಗಾಗಲೇ ಎಲ್ಲರೂ ಸ್ವಾಗತಿಸಿದ್ದಾರೆ. ಹಾಗೆಯೇ ತೇಜಸ್ವಿನಿ ಅನಂತ್ ಕುಮಾರ್ ಕೂಡ ತಾನು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಹೀಗಾಗಿ ಇಲ್ಲಿ ಯಾವುದೇ ಗೊಂದಲವಿಲ್ಲ. ಒಟ್ಟಿನಲ್ಲಿ ತೇಜಸ್ವಿ ಸೂರ್ಯ ಅವರ ಗೆಲುವು ಖಚಿತ ಎಂದು ಹೇಳಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬೆಂಗಳೂರು ದಕ್ಷಿಣದಿಂದ ತೇಜಸ್ವಿನಿ ಅನಂತ್ ಕುಮಾರ್ ಹೆಸರನ್ನು ಬಿಜೆಪಿ ನಾಯಕರು ಶಿಫಾರಸು ಮಾಡಿದ್ದಾರೆ. ಆದ್ರೆ ನಾಮಪತ್ರದ ಕೊನೆಯ ದಿನ ಅಂದರೆ ಸೋಮವಾರ ಮಧ್ಯರಾತ್ರಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಗಿತ್ತು.