ಬೆಂಗಳೂರು: ಬಿಎಸ್ಪಿ ಶಾಸಕ ಎನ್.ಮಹೇಶ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿ ಬಿಜೆಪಿಗೆ ಬೆಂಬಲ ನೀಡಲು ಕೇಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಎನ್ ಮಹೇಶ್ ಅವರು ಕೂಡ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಅವರನ್ನು ಕರೆದು ವೈಯಕ್ತಿಕವಾಗಿ ಮಾತನಾಡುವ ಪ್ರಯತ್ನ ಮಾಡುತ್ತೇನೆ ಎಂದರು.
Advertisement
Advertisement
ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆ ಬಗ್ಗೆ ಮಾತನಾಡಿದ ಬಿಎಸ್ವೈ, ನಾಳೆ ನಮ್ಮ ಕೆಲ ಶಾಸಕರು ಸ್ಪೀಕರ್ ಅವರನ್ನು ಭೇಟಿ ಮಾಡುತ್ತಾರೆ. ರಾಜಕೀಯ ಅಸ್ಥಿರತೆ ಉಂಟಾಗುವುದರಿಂದ ಬಹುಬೇಗ ನಿರ್ಧಾರ ಕೈಗೊಳ್ಳಲು ಮನವಿ ಮಾಡುತ್ತಾರೆ ಎಂದರು. ಅಲ್ಲದೇ ನಾಳೆ ಬೆಳಗ್ಗೆ 11 ಗಂಟೆಗೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಬಹುಮತ ಇಲ್ಲದ ಸಿಎಂ ಎಚ್ಡಿಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
Advertisement
ಈ ಹಿಂದೆ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದ ಶಾಸಕ ಎನ್. ಮಹೇಶ್ ಅವರು, ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಬೆಂಬಲ ನೀಡಲ್ಲ. ಹಾಗಾಗಿ ಬಿಜೆಪಿ ಸೇರುವ ಪ್ರಶ್ನೆಯೇ ಉದ್ಭವಿಸಲ್ಲ. ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ನಿರ್ದೇಶನದ ಮೇರೆಗೆ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಭಾನುವಾರ ರಾತ್ರಿ ಕಾಂಗ್ರೆಸ್-ಜೆಡಿಎಸ್ ನಾಯಕರ ಸಭೆಯಲ್ಲಿ ಎನ್.ಮಹೇಶ್ ಭಾಗಿಯಾಗಿದ್ದರು. ಆದರೆ ಸಭೆಯಿಂದ ಅರ್ಧದಿಂದಲೇ ಎನ್.ಮಹೇಶ್ ಹೊರ ಬಂದಿದ್ದರು. ಈ ಸಂದರ್ಭದಲ್ಲಿಯೇ ಅವರು ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಸದ್ಯ ಬಿಎಸ್ವೈ ಅವರು ನಾನು ಇದುವರೆಗೂ ಅವರ ಬಳಿ ಮಾತನಾಡಿಲ್ಲ. ಶೀಘ್ರವೇ ವೈಯಕ್ತಿಕವಾಗಿ ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.