ಹಾಸನ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಮ್ಮ ಪಕ್ಷದ ಹಿರಿಯರಾಗಿದ್ದು, ನಾವು ಪಕ್ಷ ಬಿಟ್ಟು ಬಿಜೆಪಿ ಸೇರಿದ ನಂತರ ಕೊಟ್ಟ ಮಾತಿನಂತೆ ಇಂದಿಗೂ ನಡೆದುಕೊಂಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತೇನೆ ಎಂದು ನೂತನ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಜಿಲ್ಲೆಯ ಮಲೆನಾಡು ಭಾಗವಾದ ಸಕಲೇಶಪುರದಲ್ಲಿ ಸಂಭವಿಸಿರುವ ಮಳೆಹಾನಿ ಸಂಬಂಧ ಭೇಟಿಗೂ ಮುನ್ನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ನಮಗೆ ಸಚಿವ ಸ್ಥಾನ ದೊರಕಿದೆ. ನನಗೆ ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಇದೀಗ ಖಾತೆ ಹಂಚಿಕೆ ವಿಷಯವಾಗಿ ಮಾತುಕತೆ ನಡೆಯುತ್ತಿದೆ. ಇಂತದ್ದೆ ಖಾತೆ ಬೇಕು ಎಂದು ನಾನು ಕೇಳುವುದಿಲ್ಲ. ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಆತ್ಮತೃಪ್ತಿಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿ: ಶ್ರೀನಿವಾಸ್ ಪ್ರಸಾದ್
ಮುಖ್ಯಮಂತ್ರಿಗಳು ಯಾವುದೇ ಖಾತೆ ನೀಡಿದರು ಸಹ ನಿಭಾಯಿಸಲು ರೆಡಿಯಾಗಿದ್ದೇನೆ. ಇಂದು ಜಿಲ್ಲೆಯ ಸಕಲೇಶಪುರ ಭಾಗದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದೇನೆ ವಾರದ ಹಿಂದೆಯೂ ಸಹ ಭೇಟಿ ನೀಡಲಾಗಿತ್ತು. ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಬಿಎಸ್ವೈ ಪುತ್ರ ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡುವ ವಿಚಾರವಾಗಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಇದು ಪಕ್ಷದ ಆಂತರಿಕ ವಿಚಾರ. ಅದನ್ನು ಪಕ್ಷದ ಹಿರಿಯರು ತೀರ್ಮಾನ ಕೈಗೊಳ್ಳಲಿದ್ದಾರೆ. ಜಮೀರ್ ಅಹ್ಮದ್ ಮನೆ ಮೇಲೆ ಐಟಿ ದಾಳಿ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಮಗೂ ಅದಕ್ಕೂ ಸಂಬಂಧವಿಲ್ಲ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ಹಾಸನದಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ವಿಚಾರವಾಗಿ ತಿಳಿದುಬಂದಿದ್ದು, ಆರೋಗ್ಯ ಇಲಾಖೆಗೆ ಅಗತ್ಯ ಕ್ರಮವಹಿಸಲು ಕಠಿಣ ಸೂಚನೆ ನೀಡಲಾಗಿದೆ. ಹಾಸನದಲ್ಲಿ ಸದ್ಯಕ್ಕೆ ವೀಕೆಂಡ್ ಲಾಕ್ಡೌನ್ ಮಾಡುವ ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದರು.