ದಾವಣಗೆರೆ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಕಾರಣರಾದವರನ್ನು ಕಾಂಗ್ರೆಸ್ ನಾಯಕರು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆ ವೇಳೆ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಮುಸ್ಲಿಂ ನಾಯಕ ಅಲ್ತಾಫ್ ಹಳ್ಳೂರು ಭಾಗಿ ಆಗಿರುವುದು ಜಗಜ್ಜಾಹೀರವಾಗಿದೆ. ಆದರೆ ಕಾಂಗ್ರೆಸ್ ನಾಯಕರು ಅಮಾಯಕರನ್ನು ಬಂಧಿಸಬೇಡಿ ಎನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ನಾಯಕರು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯನವರಿಗೆ ಇದು ಶೋಭೆ ತರುವ ಕೆಲಸ ಅಲ್ಲ. ವಿರೋಧ ಪಕ್ಷದ ನಾಯಕರಾಗಿ ಈ ರೀತಿ ಮಾತನಾಡಬಾರದು. ಸ್ಥಳಕ್ಕೆ ಹೋಗಿ ನೋಡಿಕೊಂಡು ಬರಬೇಕು ಎಂದು ಕೇಳಿಕೊಳ್ಳುತ್ತೇನೆ. ವಾಸ್ತವ ಸ್ಥಿತಿ ನೋಡಿ ಮಾತನಾಡಲಿ ಎಂದ ಅವರು, ಅರಗ ಜ್ಞಾನೇಂದ್ರ ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ರೀತಿ ಘಟನೆ ನಡೆದಾಗ ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ಯಾರೋ ಒಬ್ಬರು ಹೇಳಿಕೆ ನೀಡುತ್ತಾರೆ ಅಂದರೆ ಅದನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಟಾಂಗ್ ಕೊಟ್ಟರು. ಒಳ್ಳೆಯ ಗೃಹ ಸಚಿವರು ಬೇಕು ಎಂದು ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದನ್ನು ಪರಿಗಣಿಸಲಾಗುತ್ತದೆ ಎಂದರು. ಇದನ್ನೂ ಓದಿ: ಈ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಬಿಸಿ ನಾಗೇಶ್
ದಿಂಗಲೇಶ್ವರ ಶ್ರೀ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಸಿಎಂ ಹೇಳಿಕೆ ನೀಡಿದ್ದಾರೆ. ಒಬ್ಬ ಸ್ವಾಮೀಜಿ ಆದವರು ಈ ರೀತಿಯಾಗಿ ಹೇಳುವುದು ಶೋಭೆ ತರುವುದಲ್ಲ. ಈಶ್ವರಪ್ಪ ಅದಷ್ಟು ಬೇಗ ಆರೋಪ ಮುಕ್ತರಾಗಿ ಬರುತ್ತಾರೆ. ಅವರು ಯಾವ ತಪ್ಪು ಮಾಡಿಲ್ಲ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಪಘಾತವಾದರೆ ರಸ್ತೆ ಅಗೆದವರೆ ಹೊಣೆ – ಬಿಬಿಎಂಪಿಯಿಂದ ಆದೇಶ
ಇತ್ತೀಚೆಗೆ ಪರೀಕ್ಷೆ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಮಾತನಾಡಿ, ರಾಜ್ಯದಲ್ಲಿ ಕೋಮು ಸಾಮರಸ್ಯ ಕದಲುವ ಯತ್ನ ನಡೆಯುತ್ತಿವೆ. ಮೊದಲು ರಾಜ್ಯದಲ್ಲಿ ಕೋಮು ಸಾಮರಸ್ಯ ಇತ್ತು. ಈಗಲೂ ಕೂಡಾ ರಾಜ್ಯದಲ್ಲಿ ಸಾಮರಸ್ಯ ಇದೆ. ಆದರೆ ಕೆಲವರು ಉದ್ದೇಶ ಪೂರ್ವಕವಾಗಿ ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಪರೋಕ್ಷವಾಗಿ ಕಾಂಗ್ರೆಸ್ ಮೇಲೆ ಎಂದು ಆರೋಪಿಸಿದರು.
ಮಿಷನ್ 150 ಟಾರ್ಗೆಟ್ ಇಟ್ಟುಕೊಂಡು ರಾಜ್ಯವ್ಯಾಪಿ ಕಾರ್ಯಕ್ರಮ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇವೆ. ಈಗಾಗಲೇ ವಿಜಯನಗರದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಚುನಾವಣೆಗೂ ಒಂದು ವರ್ಷ ಮೊದಲೇ ಪಕ್ಷದ ಸಂಘಟನೆಗೆ ಮುಂದಾಗಿದ್ದೇವೆ. ಪಂಚರಾಜ್ಯಗಳ ಫಲಿತಾಂಶ ಬಿಜೆಪಿಯಲ್ಲಿ ಹೊಸ ರೀತಿ ಉತ್ಸವ ಬಂದಿದೆ. ದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ರಾಜ್ಯದಲ್ಲಿ ಸ್ವಲ್ಪ ಉಸಿರಾಡುತ್ತಿದೆ. ಇಲ್ಲಿಯೂ ಸಹ ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದರು.