ಬೆಂಗಳೂರು: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಫೆಬ್ರವರಿ 9ವರೆಗೆ ಅಧಿವೇಶನದ ನಡೆಯಲಿದ್ದು, ಮೊದಲ ದಿನವಾದ ಇಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಫೆಬ್ರವರಿ 1 ರಂದು ವಿತ್ತ ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದಾರೆ. ಈ ಮಧ್ಯೆ ತ್ರಿವಳಿ ತಲಾಖ್ ರದ್ದು ಮಸೂದೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರ ಪಣ ತೊಟ್ಟಿದೆ. ಅಲ್ಲದೇ ಮೋಟಾರ್ ವಾಹನ ತಿದ್ದುಪಡಿ ಮಸೂದೆ, ಗ್ರಾಹಕರ ರಕ್ಷಣೆ ಮಸೂದೆ ಕೂಡ ಚರ್ಚೆಗೆ ಬರಲಿದೆ.
ಸರ್ಕಾರ ವಿರುದ್ಧ ಮುಗಿಬೀಳಲು ವಿಪಕ್ಷಗಳು ಅಣಿಯಾಗಿವೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆಗಳ ವಿರುದ್ಧದ ಹೇಳಿಕೆಗಳು ಹಾಗೂ ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನ ತರಾಟೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.