ಹುಬ್ಬಳ್ಳಿ: ಉತ್ತರ ಕರ್ನಾಟಕದ ಏಳು ಜನ ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ.
ನಗರದಲ್ಲಿ ಇಂದು ಬಿಜೆಪಿ ನಾಯಕರ ಸಭೆ ಹಾಗೂ ಕೋರಂ ಕಮೀಟಿ ಸಭೆ ಜರುಗಿತು. ಉತ್ತರ ಕರ್ನಾಟಕದ 7 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ 4 ಪರಿಷತ್ ಕ್ಷೇತ್ರಗಳ ಚುನಾವಣೆ ಬಗ್ಗೆ ಬಿಜೆಪಿ ನಾಯಕರು ಸಾಲು ಸಾಲಾಗಿ ಸಭೆ ನಡೆಸಿ ನಂತರ ಕೋರ ಕಮೀಟಿ ಸಭೆಯಲ್ಲಿ ತೀರ್ಮಾನ ಕೈಗೊಂಡರು.
ಖಾಸಗಿ ಹೋಟೇಲ್ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಸಚಿವರು, ನಾಯಕರು ಸಮಾಲೋಚನಾ ಸಭೆ ನಡೆಸಿದರು. ಈ ಸಭೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿತ್ತು.
ಈ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಏಳು ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆ, 4 ಪರಿಷತ್ ಕ್ಷೇತ್ರಗಳ ಚುನಾವಣೆ ಬಗ್ಗೆ ಚರ್ಚೆ ನಡೆದಿದೆ. ಅನರ್ಹ ಶಾಸಕರ ಕ್ಷೇತ್ರಗಳ ಮುಖಂಡರು, ಟಿಕೆಟ್ ಆಕಾಂಕ್ಷಿಗಳ ಮಾತುಗಳನ್ನು ಸಿಎಂ ಆಲಿಸಿದ್ದಾರೆ. ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಕಳೆದ ಬಾರಿ ಸ್ಪರ್ಧಿಸಿದ್ದವರ ಮನವೊಲಿಕೆ ಯತ್ನ ನಡೆದಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.
ಪಕ್ಷದ ಪ್ರಮುಖ ನಾಯಕರಿಗೆ ಬಂಡಾಯ ಶಮನದ ಹೊಣೆಯನ್ನು ಸಭೆಯಲ್ಲಿ ನೀಡಲಾಗಿದೆ. ಅನರ್ಹ ಶಾಸಕರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಅವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು. ಏಳಕ್ಕೆ ಏಳು ಕ್ಷೇತ್ರ ಗೆಲ್ಲಬೇಕು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸುವಂತೆ ಸಿಎಂ ಯಡಿಯೂರಪ್ಪ ನೇತೃತ್ವ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಈ ಸಭೆಯಲ್ಲಿ ಹೆಚ್ಚಾಗಿ ಚರ್ಚೆಯಾಗಿದ್ದು ಬಳ್ಳಾರಿಯ ಬಂಡಾಯ. ಅನರ್ಹ ಶಾಸಕ ಆನಂದ್ ಸಿಂಗ್ ಅವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆನಂದ್ ಸಿಂಗ್ ಧೈರ್ಯ ಮಾಡಿದ್ದಕ್ಕೆ ಉಳಿದ ಶಾಸಕರು ಮುಂದೆ ಬಂದು ರಾಜೀನಾಮೆ ನೀಡಿದರು ಎಂದು ಸಿಎಂ ಯಡಿಯೂರಪ್ಪ ಸ್ಮರಿಸಿದ್ದಾರೆ. ಈ ವಿಚಾರವಾಗಿ ಸಭೆಯಲ್ಲಿ ಬಳ್ಳಾರಿ ಬಂಡಾಯ ಹೊತ್ತಿ ಉರಿಯಿತು. ಇತ್ತ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಸೋಮಶೇಖರರೆಡ್ಡಿ, ಗವಿಯಪ್ಪ ಸಭೆಯಿಂದ ದೂರ ಉಳಿದಿದ್ದರು ಎಂದು ಮೂಲಗಳಿಂದ ಕೇಳಿ ಬಂದಿದೆ.