ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಸುಸಜ್ಜಿತ ಶಾಲಾ ಕಟ್ಟಡಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗನವಾಡಿ ಕಟ್ಟಡಗಳ ನಿರ್ಮಾಣದ ಮಹತ್ವಾಕಾಂಕ್ಷಿ ಯೋಜನೆಯನ್ನು ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳು ಪೂರ್ಣಗೊಳ್ಳುವ ಹಂತದಲ್ಲಿವೆ ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಇಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಮತ್ತು ಸುರಕ್ಷತೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯು ಈ ಕಟ್ಟಡಗಳನ್ನು ನಿರ್ಮಿಸುವ ಜವಾಬ್ಧಾರಿ ವಹಿಸಿಕೊಂಡಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 756 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ 3,423 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಈ ಪೈಕಿ ಈಗಾಗಲೇ 2,684 ಕಟ್ಟಡಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಈ ಯೋಜನೆಯನ್ನು ನಬಾರ್ಡ್ನ ಆರ್ಐಡಿಎಫ್-25 ಅನ್ವಯ ಜಾರಿಗೊಳಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ರೆಸಿಡೆನ್ಷಿಯಲ್ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ: ಸಚಿವ ಬಿ.ಸಿ.ನಾಗೇಶ್
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 137 ಕೋಟಿ ರೂ. ವೆಚ್ಚದಲ್ಲಿ ಒಟ್ಟು 842 ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದ್ದು, ಈ ಪೈಕಿ 525 ಕೇಂದ್ರಗಳ ನಿರ್ಮಾಣ ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಉಳಿದವುಗಳನ್ನು ಮುಂದಿನ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಹೊಸ ಶೈಕ್ಷಣಿಕ ಕ್ರಾಂತಿಗೆ ಅವಕಾಶವಾಗುವ ನಿಟ್ಟಿನಲ್ಲಿ ಈ ಯೋಜನೆಯು ತುಂಬಾ ಸಹಕಾರಿಯಾಗಲಿದೆ ಎಂದು ಸಚಿವರು ಆಶಾವಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂತಹ ಕೆಟ್ಟ, ದುರಾಡಳಿತ, ಭ್ರಷ್ಟಾಚಾರದ ಸರ್ಕಾರವನ್ನು ಇದುವರೆಗೂ ನಾನು ನೋಡಿರಲಿಲ್ಲ: ಸಿದ್ದರಾಮಯ್ಯ