ಚಿಕ್ಕೋಡಿ: ಪೌರತ್ವ ಕಾಯ್ದೆ ವಿರೋಧಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ನಡೆಸಲಾಯಿತು.
ಸಂಕೇಶ್ವರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೇರಿದ ಮುಸ್ಲಿಂ ಬಾಂಧವರು ಸಭೆ ನಡೆಸಿದರು. ಬಳಿಕ ಪ್ರತಿಭಟನೆ ನಡೆಸಿ ಪೌರತ್ವ ತಿದ್ದುಪಡೆ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆ ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ವಕೀಲ ವಿಕ್ರಮ್ ಕರನಿಂಗ ಅವರು, ಎನ್ಆರ್ಸಿ ಹಾಗೂ ಸಿಎಎ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು. ಡಾ. ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ದೇಶದ ಯಾವುದೇ ನಾಗರಿಕರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಆದರೆ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿ ಕಾಯ್ದೆಗಳನ್ನು ಜಾರಿ ತಂದರೆ ಸುಮ್ಮನೆ ಕುಳಿತುಕೊಳ್ಳದೆ ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂದು ಕರೆ ನೀಡಿದರು.
ಪ್ರತಿಭಟನೆ ಬಳಿಕ ಹುಕ್ಕೇರಿ ತಹಶೀಲ್ದಾರ್ ರೇಷ್ಮಾ ತಾಳಿಕೋಟೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಕಾರರ ಮನವಿ ಪತ್ರ ಸ್ವೀಕರಿಸಿದರು. ಬಳಿಕ ಶಾಂತಿಯುತ ಪ್ರತಿಭಟನೆ ಮಾಡಿದ್ದಕ್ಕೆ ಪ್ರತಿಭಟನಾಕಾರರಿಗೆ ತಹಶೀಲ್ದಾರ್ ಧನ್ಯವಾದ ತಿಳಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಸಂಕೇಶ್ವರ ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಪ್ರತಿಭಟನೆಗೆ ಬಂದೋಬಸ್ತ್ ಕಲ್ಪಿಸಿದ್ದ ಪೊಲೀಸರಿಗೆ ಪ್ರತಿಭಟನಾಕಾರರು ಗುಲಾಬಿ ಹೂವು ಕೊಟ್ಟು ಅಭಿನಂದನೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನೂರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.