ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಕುಮಾರಸ್ವಾಮಿ ಮಾತುಕತೆ ಯಶಸ್ವಿಯಾಗಿದ್ದು, ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.
ಪಕ್ಷೇತರ ಶಾಸಕರಿಬ್ಬರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಖಾಲಿ ಇರುವ ಮೂರು ಸ್ಥಾನಗಳ ಪೈಕಿ ಒಂದು ಸ್ಥಾನ ಬಾಕಿ ಉಳಿಸಿಕೊಂಡು ಎರಡು ಸ್ಥಾನ ತುಂಬಲು ನಿರ್ಧಾರ ಮಾಡಲಾಗಿದ್ದು, ಶಂಕರ್ ಹಾಗೂ ನಾಗೇಶ್ ಇಬ್ಬರು ಸಂಪುಟ ಸೇರುವ ಸಾಧ್ಯತೆಗಳಿವೆ.
ರಾಜ್ಯಪಾಲರು ಒಪ್ಪಿದರೆ ಸೋಮವಾರವೇ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಲಿದೆ. ಇಲ್ಲದಿದ್ದರೆ ಬುಧವಾರ ಹಾಗೂ ಗುರುವಾರದಂದು ಸಂಪುಟ ವಿಸ್ತರಣೆಯಾಗಲಿದೆ. ಈ ಹಿಂದೆ ಸಂಪುಟ ಪುನಾರಚನೆ ಮಾಡದೆ ಕೇವಲ ಇಬ್ಬರು ಪಕ್ಷೇತರ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿತ್ತು.
ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದ ಕೆಪಿಸಿಸಿ ಉಸ್ತುವಾರಿ ವೇಣುಗೋಪಾಲ್ ಸರಣಿ ಸಭೆ ನಡೆಸಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಬೇಡ. ಇರುವ ಖಾಲಿ ಸ್ಥಾನಗಳನ್ನು ಭರ್ತಿ ಮಾಡಿದರೆ ಸಾಕು ಎಂದು ಪಟ್ಟು ಹಿಡಿದಿದ್ದರು ಎಂದು ತಿಳಿದು ಬಂದಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಪಟ್ಟಿಗೆ ಮಣಿದಿರುವ ಕೆ.ಸಿ ವೇಣುಗೋಪಾಲ್ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳದೆ ದೆಹಲಿಗೆ ತೆರಳಿದ್ದರು.