ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರದ 17 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಬಿಜೆಪಿಯಲ್ಲೇ ಅಸಮಾಧಾನ ಸ್ಫೋಟಗೊಂಡಿದೆ.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಅತೃಪ್ತ ಶಾಸಕರು ಗೈರಾಗಿದ್ದಾರೆ. ರೇಣುಕಾಚಾರ್ಯ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ತಿಪ್ಪಾರೆಡ್ಡಿ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ರಾಮದಾಸ್, ಶಿವನಗೌಡ ನಾಯಕ್, ಕೆ.ಜಿ.ಬೋಪಯ್ಯ ಇವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗಿದ್ದರು.
ಪಕ್ಷಕ್ಕೆ ನಿಷ್ಠೆಯಿಂದ ಇದ್ದವರು ತಮಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ಭರವಸೆಯಲ್ಲಿದ್ದರು. ಆದರೆ ಅವರಿಗೆ ಯಾವುದೇ ಸ್ಥಾನ ಸಿಗಲಿಲ್ಲ. ಹೀಗಾಗಿ ಬಿಜೆಪಿಯಲ್ಲಿ ಬಂಡಾಯ ಎದ್ದಿದ್ದು, ಅತೃಪ್ತರು ಸಭೆ ಮಾಡಬೇಕು ಎಂದು ನಿರ್ಧಾರ ಮಾಡಿದ್ದಾರೆ.
ಚಿತ್ರದುರ್ಗದ ಸರ್ಕಲ್ನಲ್ಲಿ ಶಾಸಕ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ತಪ್ಪಿದೆ ಹಿನ್ನೆಲೆಯಲ್ಲಿ ಬೆಂಬಲಿಗರು ಪ್ರತಿಭಟನೆ ಮಾಡಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯರು, ನಗರಸಭೆ ಸದಸ್ಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ನಡು ರಸ್ತೆಯಲ್ಲಿ ಸ್ಕೂಟಿಗೆ ಬೆಂಕಿ ಹಚ್ಚಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.