ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಸಮೀಪದ ಬೈಚಾಪುರ ಗ್ರಾಮದ ಬಳಿ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.
ನೆಲಮಂಗಲ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಅತಿ ವೇಗದಲ್ಲಿ ಹೋಗುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಪಕ್ಕದಲ್ಲಿದ್ದ ಪ್ರಯಾಣಿಕರ ತಂಗುದಾಣಕ್ಕೆ ಗುದ್ದಿದೆ.ಬೈಕ್ ನಲ್ಲಿ ತೆರಳುತ್ತಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇನ್ನು ಕಾರಿನಲ್ಲಿದ್ದ 6 ಜನರಲ್ಲಿ ಇಬ್ಬರು ಅಸುನೀಗಿದ್ದಾರೆ.
ತುಮಕೂರು ಜಿಲ್ಲೆ ತುರುವೇಕರೆ ತಾಲೂಕಿನ ಮುತ್ತುಗದಹಳ್ಳಿ ನಿವಾಸಿಗಳಾದ ಕೆಂಪರಾಜು ಕುಟುಂಬದೊಂದಿಗೆ ಬೈಕ್ ನಲ್ಲಿ ದೀಪಾವಳಿ ಹಬ್ಬ ಆಚರಿಸಲು ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಇ ವೇಳೆ ಹಿಂಬದಿಯಿಂದ ಬಂದ ಸ್ಕಾರ್ಪಿಯೋ ಕಾರು ನೇರವಾಗಿ ಬೈಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ನಲ್ಲಿದ್ದ ಕೆಂಪರಾಜು ಮತ್ತು ಅವರ ಇಬ್ಬರು ಮಕ್ಕಳಾದ ಸೌಮ್ಯ, ಸಂಜಯ್ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕೆಂಪರಾಜು ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿದ್ದ 6 ಜನರಲ್ಲಿ ಸಾಜನ್, ನವನೀದ್ ಎಂಬವರು ಸಾವನ್ನಪ್ಪಿದರೆ, ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಕಾರಿನಲ್ಲಿದ್ದವರು ಬೆಂಗಳೂರಿನ ಹೊರಮಾವು ಬಳಿಯ ಎಚ್ ಕೆ ಬಿಕೆ ಕಾಲೇಜಿನ ಇಂಜಿನಿಯರ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಇದರಲ್ಲಿ ಸಾವನಪ್ಪಿದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ನಾಗವಾರದ ನಿವಾಸಿಗಳಾಗಿದ್ದಾರೆ. ಇವರೆಲ್ಲರು ಬೆಂಗಳೂರಿನಿಂದ ಚುಂಚಿ ಫಾಲ್ಸ್ ಗೆ ತೆರಳುತ್ತಿದ್ದರು.
ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದೆ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಇನ್ನು ಮೃತ ಶವಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಕುದೂರು ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.