ಬೆಂಗಳೂರು: ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಇಬ್ಬರು ಟೆಕ್ಕಿಗಳು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಈ ಘಟನೆ ಇಂದು ಕೆಂಗೇರಿ ಬಳಿ ನೈಸ್ ರೋಡ್ ನಲ್ಲಿ ನಡೆದಿದೆ. ಮೃತ ದುರ್ದೈವಿ ಟೆಕ್ಕಿಗಳನ್ನು ಪ್ರಶಾಂತ್ ಹಾಗೂ ಅಕ್ಷಯ್ ಕುಮಾರ್ ಎಂದು ಗುರುತಿಸಲಾಗಿದೆ.
ಬನ್ನೇರುಘಟ್ಟದ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಗಳಾಗಿ ಕೆಲಸ ಮಾಡುತ್ತಿದ್ದ ಮೃತರಿಬ್ಬರು ಕೆಂಗೇರಿಯ ನೈಸ್ ರೋಡ್ ನಲ್ಲಿ ವೇಗವಾಗಿ ತಮ್ಮ ಕಾರು ಚಲಾಯಿಸಿದ್ದರಿಂದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆಂಗೇರಿಯ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.