ವಿಜಯಪುರ: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ಮತದಾನದ ವೇಳೆ ತಪ್ಪು ಮಾಹಿತಿಯಿಂದಾಗಿ ಗ್ರಾಮಸ್ಥರೇ ಮತಯಂತ್ರಗಳನ್ನು (Voting Machine) ಪುಡಿಪುಡಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 25-30 ಜನರನ್ನು ವಶಕ್ಕೆ ಪಡೆದಿದ್ದಾರೆ.
ವಿಜಯಪುರ (Vijayapura) ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್ಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ. ಅವುಗಳನ್ನು ಚುನಾವಣಾ ಸಿಬ್ಬಂದಿ ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ 25-30 ಜನರನ್ನು ವಶಕ್ಕೆ ಪಡೆಯಲಾಗಿದೆ. ಗ್ರಾಮಸ್ಥರು ಇವಿಎಂ, ವಿವಿಪ್ಯಾಟ್ಗಳು ಹಾಗೂ ಕಾರನ್ನು ಹಾನಿಗೊಳಿಸಿದ್ದಾರೆ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಂಡರೆ ಕ್ರಮ ಫಿಕ್ಸ್ ಎಂದು ಎಸ್ಪಿ ಹೆಚ್ಡಿ ಆನಂದ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ವಿಜಯಪುರ ಗ್ರಾಮಸ್ಥರು
ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಗ್ರಾಮಸ್ಥರು ಮತ ಯಂತ್ರ ಒಡೆದು ಹಾಕಿದ್ದಾರೆ. ಘಟನೆಯ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗೂ ಥಳಿಸಿದ್ದು, ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates