ಉಡುಪಿ: ನೋಟಾಕ್ಕೆ ಮತ ಹಾಕುವಂತೆ ಪ್ರಭಾವ ಬೀರುವುದು ಅಪರಾಧ. ಆದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪಕ್ಷ ಅಥವಾ ವ್ಯಕ್ತಿ ವಿರುದ್ಧ ನೋಟಾ ಅಭಿಯಾನ ಮಾಡಿದರೆ ಅವರ ಮೇಲೆ ಕೇಸ್ ದಾಖಲಾಗುತ್ತದೆ ಎಂದು ಉಡುಪಿ ಡಿಸಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೋಟಾ ಬಗ್ಗೆ ಮಾಹಿತಿ ನೀಡುವುದು ತಪ್ಪಲ್ಲ. ಆದ್ರೆ ನೋಟಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಕೊಡುವಂತಿಲ್ಲ. ನೋಟಾ ಒಂದು ಆಯ್ಕೆ ಮಾತ್ರ. ಇದು ದೇಶದ ಮತದಾರರ ವೈಯಕ್ತಿಕ ಹಕ್ಕು. ಹೀಗಾಗಿ ನೋಟಾಕ್ಕೆ ಮತಹಾಕಿ ಎಂದು ಪ್ರಚಾರ ಮಾಡುವುದು ಕಾನೂನು ಬಾಹಿರ. ಸಾಮಾಜಿಕ ಜಾಲತಾಣದಲ್ಲಿ ನೋಟಾ ಅಭಿಯಾನ ಮಾಡುವಂತಿಲ್ಲ. ನೋಟಾ ಬಗ್ಗೆ ಯಾರೂ ಎಲ್ಲೂ ಪ್ರಚಾರ ಕೊಡಬಾರದು. ನೋಟಾ ಬಗ್ಗೆ ಮಾಹಿತಿ ನೀಡುವ ಅವಕಾಶ ಇದೆ. ಆದ್ರೆ ಅದನ್ನೇ ರಾಜಕೀಯಕ್ಕೆ ಬಳಸುವಂತಿಲ್ಲ. ಹೀಗೆ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ ಮೇಲೆ ಪ್ರಕರಣ ದಾಖಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕಣಕ್ಕಿಳಿದಿದ್ದಾರೆ. ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ವ್ಯಕ್ತಿಗಳು ನೋಟಾ ಒತ್ತುವಂತೆ ಪ್ರಚಾರ ಮಾಡುತ್ತಿದ್ದಾರೆ.
ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಅಡಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್ಸಿನಲ್ಲೇ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಕೆಲ ಕಾಂಗ್ರೆಸ್ ನಾಯಕರು ನೋಟಾ ಒತ್ತುವಂತೆ ಪ್ರಚಾರ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೋಟಾದ ಬಗ್ಗೆ ಭಾರೀ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಈ ಎಚ್ಚರಿಕೆ ನೀಡಿದ್ದಾರೆ.