ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಇದೀಗ ಸ್ವಪಕ್ಷದ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ಮಂಡ್ಯದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ (Ravikumar Ganiga) ಸರ್ಕಾರದ ನಡೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ರವಿಕುಮಾರ್ ಗಣಿಗ, ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ನಮ್ಮ ರಾಜ್ಯದ ರೈತರಿಗೆ ಬೆಳೆಗಳಿಗೆ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾದರೆ ಸಮಸ್ಯೆ ಮತ್ತಷ್ಟು ಗಂಭೀರವಾಗಲಿದೆ ಎಂದು ಹೇಳಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ರಾಜ್ಯದ ನೈಜ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ಮಂಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ನೀರಿನ ಕೊರತೆ ಇದೆ ಎಂಬುದನ್ನು ಅಂಕಿ-ಅಂಶಗಳ ಸಮೇತ ಪ್ರಾಧಿಕಾರದ ಮುಂದೆ ಬಲವಾಗಿ ಪ್ರತಿಪಾದಿಸಬೇಕು ಎಂದಿದ್ದಾರೆ.
ಇದಕ್ಕಾಗಿ ತಜ್ಞರ ತಂಡವನ್ನು CWMA ಮುಂದೆ ಕಳುಹಿಸಬೇಕು. ಜೊತೆಗೆ ತಕ್ಷಣವೇ ವಿಧಾನಸಭೆ ಅಧಿವೇಶನ ಕರೆದು, ರಾಜ್ಯದ ನೀರಿನ ಪರಿಸ್ಥಿತಿ ಬಗ್ಗೆ ಒಮ್ಮತದ ನಿರ್ಣಯ ಕೈಗೊಂಡು ಬಲವಾದ ವಾದ ಮಂಡಿಸಬೇಕು ಎಂದು ರವಿಕುಮಾರ್ ಗಣಿಗ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಆನೆಗಳ ಹಿಂಡು ಹಳಿ ದಾಟುವವರೆಗೆ ನಿಂತ ರಾಜಧಾನಿ ಎಕ್ಸ್ಪ್ರೆಸ್ – ಅರಣ್ಯಾಧಿಕಾರಿಯ ಸಮಯಪ್ರಜ್ಞೆಗೆ ಮೆಚ್ಚುಗೆ
ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಈಗಾಗಲೇ ವಿರೋಧ ಪಕ್ಷಗಳು ಹಾಗೂ ರೈತ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿರುವುದು ಕಾವೇರಿ ಕಣಿವೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದ ಮುಂದುವರಿದಿದೆ. ಹೀಗಾಗಿ ರಾಜ್ಯದ ರೈತರ ಹಿತ ಕಾಪಾಡುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇದನ್ನೂ ಓದಿ: ರೀಲ್ಸ್ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್

