ಹುಬ್ಬಳ್ಳಿ: ಕದನ ವಿರಾಮ ಘೋಷಣೆಯಾದ ಮೇಲೆಯೂ ಪಾಕಿಸ್ತಾನ ದಾಳಿ ಮುಂದುವರೆಸಿ ಇಬ್ಬಗೆ ನೀತಿ ಪ್ರದರ್ಶಿಸಿದ್ದು, ಭಾರತೀಯ ಸೇನೆ (Indian Army) ಇದಕ್ಕೆ ಪ್ರತ್ಯುತ್ತರ ಕೊಡುತ್ತದೆ. ಪಾಕ್ ವಿರುದ್ಧದ ದಾಳಿಗೆ ಕೇಂದ್ರ ಸರ್ಕಾರ ಸೇನೆಗೆ ಮುಕ್ತ ಅಧಿಕಾರ, ಸ್ವಾತಂತ್ರ್ಯ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದರು.
ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಯಾವತ್ತೂ ದ್ವಂದ್ವ ನಿಲುವು ಮತ್ತು ಇಬ್ಬಗೆ ನೀತಿ ಅನುಸರಿಸುವಲ್ಲಿ ಎತ್ತಿದ ಕೈ ಎಂಬುದು ಗೊತ್ತಿರುವ ವಿಷಯ. ಅಲ್ಲದೇ, ಅಲ್ಲಿನ ಮಿಲಿಟರಿ ಪಡೆ ಚುನಾಯಿತ ಸರ್ಕಾರದ ಮಾತು ಕೇಳುವುದಿಲ್ಲ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ:`ಆಪರೇಷನ್ ಸಿಂಧೂರ’ ಭಾರತದ ರಾಜಕೀಯ, ಸಾಮಾಜಿಕ, ಮಿಲಿಟರಿ ಶಕ್ತಿಯ ಬಲ – ರಾಜನಾಥ್ ಸಿಂಗ್
ಪಹಲ್ಗಾಮ್ (Pahalgam) ಭಯೋತ್ಪಾದಕ ದಾಳಿಯ ನಂತರ ಗುಳ್ಳೇನರಿ ಬುದ್ಧಿಯ ಪಾಕಿಸ್ತಾನಕ್ಕೆ ಪಾಠ ಕಲಿಸಲು ಭಾರತೀಯ ಸೇನೆಗೆ ನಮ್ಮ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅದರಂತೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ, ಪ್ರತೀಕಾರದಲ್ಲಿ ತೊಡಗಿದೆ. ಬಹುದೊಡ್ಡ ಸಂಖ್ಯೆಯಲ್ಲಿ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿದೆ. ಭಾರತೀಯ ಸೇನೆ ಮೊದಲ ದಿನವೇ ಪಾಕಿಸ್ತಾನದ 9ಕ್ಕಿಂತ ಹೆಚ್ಚು ಭಯೋತ್ಪಾದಕರ ನೆಲೆಗಳನ್ನು ನಾಶಪಡಿಸಿದೆ. ಈ ದಾಳಿಯಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಭಯೋತ್ಪಾದಕರು ಮತ್ತು ಭಯೋತ್ಪಾದಕ ಕುಟುಂಬಗಳು ಬಲಿಯಾಗಿವೆ. ಸಾಕಷ್ಟು ಭಯೋತ್ಪಾದಕ ಅಡಗುತಾಣಗಳು ಛಿದ್ರವಾಗಿವೆ. ಪ್ರಮುಖ ಉಗ್ರರು ಹತರಾಗಿದ್ದಾರೆ ಎಂದು ತಿಳಿಸಿದರು.
ಯುದ್ಧವಾಗಿ ಪರಿಗಣಿಸುವ ಕಠಿಣ ನಿಲುವು: ದೇಶದಲ್ಲಿ ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಗೆ ಪಣ ತೊಟ್ಟ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ ಅತ್ಯಂತ ಕಠೋರ ನಿಲುವು ತೆಗೆದುಕೊಂಡಿದೆ. ಪಾಕ್ ಕದನ ವಿರಾಮಕ್ಕೂ ಮೊದಲೇ ಭಯೋತ್ಪಾದನೆಯನ್ನು ಯುದ್ಧವಾಗಿ ಪರಿಗಣಿಸುವಂತಹ ಅಭೂತಪೂರ್ವ ನಿರ್ಣಯ ಕೈಗೊಂಡಿದೆ ಎಂದು ಹೇಳಿದರು.
ಕದನ ವಿರಾಮ ಪ್ರಸ್ತಾಪಿಸಿದ್ದ ಪಾಕ್: ಪಾಕಿಸ್ತಾನದ ಮಿಲಿಟರಿ ಪಡೆಗಳ ನಿರ್ದೇಶಕರು ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಿಗೆ ಫೋನ್ ಮಾಡಿ ಕದನ ವಿರಾಮಕ್ಕೆ ವಿನಂತಿ ಮಾಡಿದ್ದರು. ಆದರೆ ಅದನ್ನು ಈಗ ಉಲ್ಲಂಘಿಸಿದ್ದಾರೆ. ಹೀಗಾಗಿ ಭಯೋತ್ಪಾದಕರು ಮತ್ತು ಭಯೋತ್ಪಾದಕ ಸಂಘಟನೆಗಳನ್ನು ಪೋಷಿಸಿಕೊಂಡು ಬಂದ ಪಾಕ್ಗೆ ಭಾರತೀಯ ಸೇನೆ ಪ್ರತ್ಯುತ್ತರ ಕೊಡುತ್ತದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಭಯೋತ್ಪಾದನೆ ನಿಗ್ರಹಿಸಲಾಗಿದೆ. 1980ರ ನಂತರ ಪಹಲ್ಗಾಮ್ಗಿಂತ ದೊಡ್ಡ ಪ್ರಮಾಣದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಯುತ್ತಿದ್ದವು. ಆದರೆ, ಈಗ ಅಂಥದ್ದಕ್ಕೆಲ್ಲ ಕಡಿವಾಣ ಹಾಕಲಾಗಿದೆ. ಹಿಂದೆಲ್ಲಾ ದೊಡ್ಡ ಪ್ರಮಾಣದ ಭಯೋತ್ಪಾದನೆ ನಡೆದಾಗಲೂ ಸೌಮ್ಯ ಪ್ರತಿಕ್ರಿಯೆ ನೀಡುತ್ತಿದ್ದ ಭಾರತ ಇದೇ ಮೊದಲ ಬಾರಿ ಪಾಕ್ಗೆ ನುಗ್ಗಿ ಹೊಡೆಯುತ್ತಿದ್ದೇವೆ ಎಂದರು.
ಇಡೀ ದೇಶ ಒಂದಾಗಿ ಹೋರಾಡುತ್ತಿದೆ: ಪಹಲ್ಗಾಮ್ ದಾಳಿಯ ನಂತರ ಇದೇ ಮೊದಲ ಬಾರಿ ಭಯೋತ್ಪಾದನೆ ವಿರುದ್ಧ ಇಡೀ ದೇಶವೇ ಒಂದಾಗಿ ಹೋರಾಡುತ್ತಿದೆ. ಭಾರತೀಯ ಸೇನೆ ಅತ್ಯಂತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪ್ರತೀಕಾರದ ದಾಳಿಯಲ್ಲಿ ಕಂದಹಾರ ಪ್ರಕರಣದಲ್ಲಿದ್ದವರು ಮತ್ತು ಪ್ರಮುಖ ಉಗ್ರರು ಸೇರಿದಂತೆ ಅವರ ಕುಟುಂಬದವರು ಹತರಾಗಿದ್ದಾರೆ.
ಭಾರತ ಶಾಂತಿಪ್ರಿಯ ರಾಷ್ಟ್ರ. ಭಾರತೀಯರು ಯಾವತ್ತೂ ಶಾಂತಿಪ್ರಿಯರೇ, ನಾವಾಗಿಯೇ ಯಾವತ್ತೂ ಯಾರ ಮೇಲೂ ದಂಡೆತ್ತಿ ಹೋಗುವುದಿಲ್ಲ. ಆದರೆ, ನಮ್ಮ ಮೇಲೆ ಯಾರಾದರೂ ಬಂದರೆ ಸುಮ್ಮನೆ ಬಿಡುವ ಮಾತೇ ಇಲ್ಲ. ಭಾರತ-ಭಾರತೀಯರಿಗೆ ಅಂತದ್ದೊAದು ಶಕ್ತಿಯಿದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.ಇದನ್ನೂ ಓದಿ: ಪಾಕ್ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ