ನವದೆಹಲಿ: ಬಡವರು, ನಿರ್ಗತಿಕರು, ವಲಸೆ ಕೂಲಿ ಕಾರ್ಮಿಕರಿಗೆ ಅಗತ್ಯ ನೆರವು ನೀಡುವ ಮೂಲಕ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ತನ್ನ ಕಾರ್ಯಕರ್ತರಿಗೆ ಸೂಚನೆ ನೀಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಪತ್ರ ಮೂಲಕ ಮನವಿ ಮಾಡಿದ್ದು ಜಿಲ್ಲೆ, ತಾಲೂಕು, ಮತ್ತು ಬ್ಲಾಕ್ ಮಟ್ಟದಲ್ಲಿ ಈ ಕಾರ್ಯ ಮಾಡುವಂತೆ ಸೂಚಿಸಿದ್ದಾರೆ. ರಾಜ್ಯ ಪ್ರದೇಶ ಕಾಂಗ್ರೆಸ್ ಕಚೇರಿ ಮತ್ತು ಜಿಲ್ಲಾ ಕಾಂಗ್ರೆಸ್ ಕಚೇರಿಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಬೇಕು. ಈ ವೇಳೆ ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ವೇಣುಗೋಪಾಲ್ ಅವರು ಎಚ್ಚರಿಕೆ ನೀಡಿದ್ದಾರೆ.
INC COMMUNIQUE
AICC Press Release pic.twitter.com/Unstd4O0B1
— INC Sandesh (@INCSandesh) April 13, 2020
ರಾಜ್ಯ ಘಟಕಗಳು ದೊಡ್ಡ ಕಾರ್ಯಕ್ರಮ ಆಯೋಜನೆ ಮಾಡಬಾರದು ಮತ್ತು ದೊಡ್ಡ ಜನ ಸಮೂಹ ಸೇರದಂತೆ ಎಚ್ಚರಿಕೆ ವಹಿಸಬೇಕು. ಎಲ್ಲಾ ನಾಯಕರು ಮನೆಯಿಂದಲೇ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಕೊರೊನಾ ವೈರಸ್ನ ತುರ್ತು ಸಂದರ್ಭದಲ್ಲಿ ಬಡವರಿಗೆ ನೆರವಾಗಿ ಮತ್ತು ಊಟ-ಅಗತ್ಯ ವಸ್ತುಗಳನ್ನು ನೀಡಿ, ಸಾಮಾಜಿಕ ಜಾಲತಾಣಗಳಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಅಂಬೇಡ್ಕರ್ ಚಿಂತನೆಗಳನ್ನು ಜನರಿಗೆ ತಲುಪಿಸಿ ಎಂದು ಕಾಂಗ್ರೆಸ್ ಹೈಕಮಾಂಡ್ ಕಾರ್ಯಕರ್ತರಿಗೆ ತನ್ನ ಪತ್ರದ ಮೂಲಕ ತಿಳಿಸಿದೆ.