ಮಂಡ್ಯ: ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚದ ಬೇಡಿಕೆ ಇಟ್ಟಿದ್ದ ಮಂಡ್ಯ ಸೆಸ್ಕಾಂ (Mandya CESCOm) ಸಹಾಯಕ ಎಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಮಂಡ್ಯ ಸೆಸ್ಕಾಂ ಸಹಾಯಕ ಎಂಜಿನಿಯರ್ (Assistant Engineer) ಶ್ರೀನಿವಾಸ್ ಲೋಕಾಯುಕ್ತ ಬಲೆಗೆ ಸಿಲುಕಿದ ಅಧಿಕಾರಿಯಾಗಿದ್ದಾರೆ. ಸಾರ್ವಜನಿಕರೊಬ್ಬರ ಹೊಸ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಭಿವೃದ್ಧಿ ಶುಲ್ಕ ಹೊರತುಪಡಿಸಿ ಅನುಮತಿ ನೀಡುವುದಾಗಿ ಆಮಿಷ ಒಡ್ಡಿದ್ದ ಎಇ ಶ್ರೀನಿವಾಸ್, ಒಟ್ಟು 75,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ದೂರುದಾರರಿಂದ ಮುಂಗಡವಾಗಿ 30,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಸೆರೆಹಿಡಿದರು. ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿ ನಡೆದಿದೆ. ಪ್ರಸ್ತುತ ಎಇ ಶ್ರೀನಿವಾಸ್ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ಮುಂದುವರೆಸಿದ್ದಾರೆ.
