ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸುವ ಸಾಧ್ಯತೆಗಳಿವೆ. ಅಲ್ಲದೇ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.
ದರ್ಶನ್ ಅವರಿಗೆ ಅಪಘಾತವಾದ ಮೂರನೇ ದಿನವೂ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ನಟ ದರ್ಶನ್ ಅವರ ಆರೋಗ್ಯ ಬಗ್ಗೆ ವೈದ್ಯರು ಈವರೆಗೂ ಯಾವುದೇ ಮಾಹಿತಿ ನೀಡಿಲ್ಲ. ವೈದ್ಯರು ಇಂದು ಸುದ್ದಿಗೋಷ್ಟಿ ನಡೆಸುವ ಸಾಧ್ಯತೆಗಳಿದ್ದು, ಸದ್ಯ ಆಸ್ಪತ್ರೆಯಲ್ಲಿ ದರ್ಶನ್ ಹಾಗೂ ಅವರ ಸ್ನೇಹಿತ ಆಂಟೋನಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಈ ಅಪಘಾತದಲ್ಲಿ ಗಾಯಗೊಂಡಿದ್ದ ನಟ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಘಟನೆಯೇನು?:
ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಸೋಮವಾರ ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv