ಮಂಡ್ಯ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಜಿಲ್ಲೆಯ ಅಭಿವೃದ್ಧಿಗೆ ತರಲಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ಅವರು ಹೇಳಿದರು.
ಮಂಡ್ಯ (Mandya) ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು (Guarantee Schemes) ವಿರೋಧಿಸಿದವರು ಇಂದು ರಾಷ್ಟ್ರಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡಿದಷ್ಟು ಇನ್ಯಾವುದೇ ರಾಜ್ಯಗಳಲ್ಲಿ ನೀಡಿಲ್ಲ ಎಂದು ಹೇಳಿದರು.
ಪಂಚ ಗ್ಯಾರಂಟಿಗಳ ಮೂಲಕ ಪ್ರತಿ ತಾಲೂಕಿಗೆ ವಾರ್ಷಿಕ 250 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ಸಹ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನ ಘೋಷಿಸಲಾಗುವುದು ಎಂದು ತಿಳಿಸಿದರು.
ಕೃಷಿ ಇಲಾಖೆ ವತಿಯಿಂದ ಸದರಿ ವರ್ಷದ ಏಪ್ರಿಲ್ನಿಂದ ಇಲ್ಲಿಯವರೆಗೂ ಕೊಪ್ಪ ಹೋಬಳಿಯ 520 ಫಲಾನುಭವಿಗಳಿಗೆ 150 ಲಕ್ಷ ರೂ.ಗಳ ಸಹಾಯಧನ ನೀಡಲಾಗಿದೆ. ಒಟ್ಟು ಜಿಲ್ಲೆಯಲ್ಲಿ 49,330 ಫಲಾನುಭವಿಗಳಿಗೆ ಕೃಷಿ ಇಲಾಖೆಯ ವಿವಿಧ ಯೋಜನೆಗಳಿಂದ 2390.80 ಲಕ್ಷ ರೂ.ಗಳ ಸಹಾಯಧನ ನೀಡಲಾಗಿದೆ. ಒಬ್ಬರಿಗೆ ಸುಮಾರು 50 ಲಕ್ಷ ರೂ.ವರೆಗೂ ಸಬ್ಸಿಡಿ ನೀಡಲಾಗಿದೆ ಎಂದರು.
ನಮ್ಮ ಸರ್ಕಾರ ವಿವಿಧ ಯೋಜನೆಗಳ ಮೂಲಕ ಜನರಿಗೆ ಅಭಿವೃದ್ಧಿ ಕಾರ್ಯವನ್ನ ಮಾಡಲಾಗುತ್ತಿದೆ. ಕೊಪ್ಪ ಹೋಬಳಿಯಲ್ಲಿ ಇಲ್ಲಿಯವರೆಗೆ 1,300 ಹೊಸ ಪೌತಿ ಖಾತೆ, 58,00 ಹಳೆ ಪೌತಿ ಖಾತೆ ಹಾಗೂ 150 ಪೊಡಿಗಳನ್ನು ಪೌತಿ ಖಾತೆ ಆಂದೋಲನದ ಮೂಲಕ ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 18.31 ಸಾವಿರ ಕಂದಾಯ ಇಲಾಖೆಯ ದಾಖಲೆ ಹಾಳೆಗಳನ್ನ ಈಗಾಗಲೇ ಸ್ಕ್ಯಾನ್ ಮಾಡಲಾಗಿದೆ. 33,000 ಕಂದಾಯ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಹೇಳಿದರು.
ಕೃಷಿ ಸಚಿವನಾದ ನಂತರವೂ ಸಹ ಪ್ರತಿ ವಾರ ಕನಿಷ್ಠ ಒಂದು ಬಾರಿಯಾದರೂ ಜಿಲ್ಲೆಗೆ ಬಂದು ಜನರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುತ್ತಿದ್ದೇನೆ. ನಮ್ಮ ದೇಶದಲ್ಲಿ ಸುಮಾರು 60% ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ನಾನು ಕೃಷಿ ಸಚಿವನಾಗಿರುವುದರಿಂದ ಜವಾಬ್ದಾರಿ ಹೆಚ್ಚಿದೆ ಜನರು ಸಚಿವರ ಕಚೇರಿಗೆ ಭೇಟಿ ನೀಡಿ ತಮ್ಮ ಅಹವಾಲು ಗಳನ್ನು ಸಲ್ಲಿಸಬಹುದು. ಕಾನೂನಿನ ಪ್ರಕಾರ ಮಾಡಬಹುದಾದ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.



