ಚಾಮರಾಜನಗರ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಚಾಮರಾಜನಗರದಲ್ಲಿಂದು ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿಯನ್ನು ಮುಸ್ಲಿಂ ಸಂಘಟನೆಗಳು ರದ್ದುಪಡಿಸಿವೆ.
ಜಿಲ್ಲಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸದಂತೆ ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್ ಅವರು ಮುಸ್ಲಿಂ ಸಂಘಟನೆಗಳನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನ ಪ್ರತಿಭಟನೆಯನ್ನು ಕೈಬಿಟ್ಟು, ಡಿಸೆಂಬರ್ 23 ರ ಸೋಮವಾರ ಪ್ರತಿಭಟನೆ ನಡೆಸಲು ಮುಸ್ಲಿಂ ಸಂಘಟನೆಗಳು ನಿರ್ಧರಿಸಿವೆ. ಈ ಮಧ್ಯೆ ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಚಾಮರಾಜನಗರದ ಸೂಕ್ಷ್ಮ ಪ್ರದೇಶಗಳಲ್ಲಿ 500ಕ್ಕೂ ಹೆಚ್ಚು ಪೊಲೀಸರಿಂದ ಪಥ ಸಂಚಲನ ನಡೆಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಶಸ್ತ್ರ ಸಜ್ಜಿತ ಪೊಲೀಸರು ತಮ್ಮ ಶಕ್ತಿ ಪ್ರದರ್ಶನ ನಡೆಸಿದರು. ನಾಳೆ ಶನಿವಾರ ಮಧ್ಯರಾತ್ರಿ 12 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿದ್ದು ಬಂದೋಬಸ್ತ್ ಗೆ ಎರಡು ಕೆ.ಎಸ್.ಆರ್.ಪಿ. ಹಾಗೂ 11 ಡಿ.ಎ.ಆರ್. ತುಕಡಿಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.